24 ಗಂಟೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ: ಜಾಫರ್ ಶರೀಫ್ ಸುತಾರ

| Published : Jul 26 2025, 01:30 AM IST

ಸಾರಾಂಶ

ಜಲಜೀವನ್ ಮಿಷನ್ ಮೂಲಕ ಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೆ ಸಮರ್ಪಕವಾಗಿ ಪೂರೈಕೆ ಆಗುವಂತೆ ನಿಗಾ ವಹಿಸಬೇಕು.

ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮದಡಿಯಲ್ಲಿ ಏರ್ಪಡಿಸಿದ್ದ ಸಭೆ

ಕನ್ನಡಪ್ರಭ ವಾರ್ತೆ ಹೊಸಪೇಟೆ

ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಕೆಲ ಆಯ್ದ ಗ್ರಾಮಗಳಲ್ಲಿ 24 ಗಂಟೆ ನೀರು ಪೂರೈಕೆ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರಾಜ್ಯ ಉಪ ಕಾರ್ಯದರ್ಶಿ ಜಾಫರ್ ಶರೀಫ್ ಸುತಾರ ಗ್ರಾಪಂ ಪಿಡಿಓ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮದಡಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಜಲಜೀವನ್ ಮಿಷನ್ ಮೂಲಕ ಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೆ ಸಮರ್ಪಕವಾಗಿ ಪೂರೈಕೆ ಆಗುವಂತೆ ನಿಗಾ ವಹಿಸಬೇಕು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಜೆಜೆಎಂ ಮೂಲಕ ನಳದಲ್ಲಿ ಬರುವ ನೀರನ್ನು ಕುಡಿಯುವಂತೆ ಜಾಗೃತಿ ಮೂಡಿಸಬೇಕು. 24 ಗಂಟೆ ನೀರು ಪೂರೈಕೆಯಿಂದ ಎದುರಾಗುವ ಸವಾಲುಗಳ ಬಗ್ಗೆ ಪಿಡಿಓಗಳಿಂದ ಚರ್ಚಿಸಲಾಯಿತು. ಕುಡಿಯುವ ನೀರು ಪೋಲಾಗುವುದನ್ನು ನಿಯಂತ್ರಿಸಬಹುದು. 24 ಗಂಟೆಗಳ ಕಾಲ ನೀರು ಲಭ್ಯತೆಯಿಂದಾಗಿ ಅನಗತ್ಯ ನೀರು ಸಂಗ್ರಹ ನಿಲ್ಲುತ್ತದೆ. ಇದರಿಂದ ಸಮಯವು ಉಳಿತಾಯವಾಗುತ್ತದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯನ್ನು ಸಕ್ರಿಯಗೊಳಿಸಿ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿಯನ್ನು ಸರ್ಕಾರದ ಮಾರ್ಗಸೂಚಿಯಂತೆ ಅನುಷ್ಠಾನಗೊಳಿಸುವಂತೆ ಸೂಚಿಸಿದರು.

ತಾಲೂಕಿನ ಬುಕ್ಕಸಾಗರ ಗ್ರಾಮ ಪಂಚಾಯಿತಿಯ 76 ವೆಂಕಟಾಪುರ ಗ್ರಾಮಕ್ಕೆ ಭೇಟಿ ನೀಡಿ ಜಲ್‌ಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.

ಸಭೆಯಲ್ಲಿ ವಿಶ್ವ ಬ್ಯಾಂಕ್ ಟಾಸ್ಕ್ ಟೀಮ್ ಲೀಡರ್ ಎಂ.ಕುಳ್ಳಪ್ಪ, ಗುರುಗಾವ್ ಪೀಡ್‌ಬ್ಯಾಕ್ ಫೌಂಡೇಶನ್ ಸಿಇಒ ಅಜಯ್ ಸಿನ್ಹಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರೆ ಎಸ್.ದೀಪಾ, ಆರ್‌ಡಬ್ಲ್ಯುಎಸ್ ಸಹಾಯಕ ಕಾರ್ಯಪಾಲಕ ಅಭಿಯಂತರ ವಿರೇಶ್ ನಾಯಕ್ ಸೇರಿದಂತೆ ಅಧಿಕಾರಿಗಳು ಇತರರಿದ್ದರು.