Stomach pain after meal; students admitted to hospital.

ಕನ್ನಡಪ್ರಭ ವಾರ್ತೆ ಚಿತ್ತಾಪುರ (ಕಲಬುರಗಿ)

ತಾಲೂಕಿನ ದಂಡೋತಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ರಾತ್ರಿ ಊಟದ ನಂತರ ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿದ್ದಾರೆ.

ಅಂದಾಜು 20ರಿಂದ 30 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಶುರುವಾಗಿದೆ. ತಕ್ಷಣವೇ ವಿದ್ಯಾರ್ಥಿಗಳನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಚಿತ್ತಾಪುರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗಳು ಶಾಲೆಗೆ ದೌಡಾಯಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕಳಿಸುವ ಕೆಲಸ ಮಾಡಿದ್ದಾರೆ. ಘಟನೆಯಿಂದ ವಿದ್ಯಾರ್ಥಿ ಪಾಲಕರಲ್ಲಿ ತೀವ್ರ ಆತಂಕ ಉಂಟಾಗಿದೆ.

ರಾತ್ರಿ ಊಟದ ನಂತರ ಅಂದಾಜು 15 ಮಕ್ಕಳಿಗೆ ಆರೋಗ್ಯ ಹದಗೆಟ್ಟಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅಲ್ಪಸಂಖ್ಯಾತರ ಇಲಾಖೆಯ ತಾಲೂಕು ಅಧಿಕಾರಿ ಫಯಿಮ್ ತಿಳಿಸಿದ್ದಾರೆ.

ಮಕ್ಕಳ ಆರೋಗ್ಯ ಹದಗೆಟ್ಟಿದ್ದು ಫುಡ್ ಪಾಯಿಸನ್ ಆಗಿರುವ ಅನುಮಾನವಿದೆ. ಈಗಾಗಲೇ 8 ರಿಂದ 10 ವಿದ್ಯಾರ್ಥಿಗಳನ್ನು ಚಿತ್ತಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ’ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಪ್ರತಿಕ್ರಿಯಿಸಿದ್ದಾರೆ.

ಮಕ್ಕಳ ಆರೋಗ್ಯ ದೃಷ್ಟಿಯಿಂದ ಕಂದಾಯ, ಶಿಕ್ಷಣ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಆಂಬುಲೆನ್ಸ್ ಕರೆಯಿಸಿ ಮಕ್ಕಳಿಗೆ ಚಿಕಿತ್ಸೆ ಕೊಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಫೋಟೋ ಸುದ್ದಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಸರ್ಕಾರಿ ಆಸ್ಪತ್ರೆಯ ಮುಂದೆ ವಿದ್ಯಾರ್ಥಿಗಳ ಪಾಲಕರು ಹಾಗೂ ಸಾರ್ವಜನಿಕರು ಜಮಾಯಿಸಿರುವುದು