ಕನ್ನಡಪ್ರಭ ವಾರ್ತೆ ಮಂಡ್ಯ
ಖಾಸಗಿ ಶಾಲೆಗಳಿಂದ ಪೋಷಕರು ದೂರ ಉಳಿದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಬಲವರ್ಧನೆಗೊಳಿಸಬೇಕು ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಮನವಿ ಮಾಡಿದರು.ನಗರದ ಗುತ್ತಲು ಬಡಾವಣೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾರಂಭೋತ್ಸವ ಉದ್ಘಾಟಿಸಿ ಮಾತನಾಡಿ, ಗುಣಾತ್ಮಕ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳಲ್ಲಿ ಪ್ರಾಧಾನ್ಯತೆ ನೀಡಲಾಗುತ್ತಿದೆ. ಸರ್ಕಾರದಿಂದ ಉಚಿತ ಪಠ್ಯಪುಸ್ತಕಗಳು, ಬಿಸಿಯೂಟ, ಶೈಕ್ಷಣಿಕ ಪ್ರವಾಸ ಸೇರಿದಂತೆ ಮಕ್ಕಳಿಗೆ ಉತ್ತಮ ಸೌಲಭ್ಯ ನೀಡುತ್ತಿದೆ. ಪೋಷಕರು ಮಕ್ಕಳ ವಿದ್ಯಾಭ್ಯಾಸದ ಕಡೆ ಆಸಕ್ತಿ ವಹಿಸಿ ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸಲು ಸಹಕಾರಿಯಾಗಿ ನಿಲ್ಲುವಂತೆ ಕೋರಿದರು.
ಮಕ್ಕಳಿಗಾಗಿ ಆಸ್ತಿ ಮಾಡುವುದು ಬೇಡ. ಮಕ್ಕಳನ್ನೇ ದೇಶದ ಆಸ್ತಿಯನ್ನಾಗಿ ಮಾಡುವುದಕ್ಕೆ ಹೆಚ್ಚಿನ ಆಸಕ್ತಿ ವಹಿಸಬೇಕು. ಪ್ರತಿಯೊಂದು ಮಗುವು ಪ್ರತಿಭಾವಂತರಾಗಿ ರೂಪುಗೊಳ್ಳಬೇಕು. ವಿದ್ಯೆಯ ಜೊತೆಗೆ ಮಕ್ಕಳಲ್ಲಿ ಸಂಸ್ಕಾರನ್ನು ಬೆಳೆಸಿ ಉತ್ತಮ ಪ್ರಜೆಗಳನ್ನಾಗಿ ಮಾಡುವಂತೆ ತಿಳಿಸಿದರು.ಲಕ್ಷಾಂತರ ರು. ಖರ್ಚು ಮಾಡಿ ಖಾಸಗಿ ಶಾಲೆಗಳಿಗೆ ಸೇರಿಸುವ ಬದಲು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವುದರಿಂದ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದು. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಕಡಿಮೆಯೇನಿಲ್ಲ. ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳ ಸಾಧನೆ ಕಣ್ಣೆದುರಿನಲ್ಲೇ ಇದೆ. ಮಕ್ಕಳು ಉತ್ತಮವಾಗಿ ಕಲಿಯುವುದಕ್ಕೆ ಪೂರಕ ಅವಕಾಶಗಳಿರುವುದರಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಗೆ ಆಗಮಿಸಿದ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲೋಕೇಶ್, ದಕ್ಷಿಣ ವಲಯ ಶಿಕ್ಷಣಾಧಿಕಾರಿ ಕೆ.ಮಹದೇವು, ಶಾಲೆಯ ಮುಖ್ಯ ಶಿಕ್ಷಕ ಬಸವೇಗೌಡ ಹಾಜರಿದ್ದರು.ಮಕ್ಕಳಿಗೆ ಸಿಹಿ ನೀಡಿ ಶಾಲೆಗೆ ಸ್ವಾಗತ
ಮಂಡ್ಯ: ಗುಡ್ಷಫರ್ಡ್ ಶಿಕ್ಷಣ ಟ್ರಸ್ಟ್ ವತಿಯಿಂದ ಗುಡ್ ಷಫರ್ಡ್ ಬೇಬಿ ಕೇರ್, ಗುಡ್ ಷಫರ್ಡ್ ಪೂರ್ವ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವದಲ್ಲಿ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಸ್ವಾಗತಿಸಲಾಯಿತು.ಸಾಡೆ ದೇವಾಲಯದ ಸಭಾಪಾಲಕ ಜಿ.ಮೋಹನ್ ಕುಮಾರ್ ಮಾತನಾಡಿ, ಮಕ್ಕಳಿಗೆ ಶಾಲೆ ಬಗ್ಗೆ ಪ್ರೀತಿ ಮೂಡಿಸುವಂತೆ ಮಾಡುತ್ತಿರುವ ಕೆಲಸ ಶ್ಲಾಘನೀಯ. ಈಗಷ್ಟೇ ರಜೆ ಮಗಿಸಿ ಆಗಮಿಸಿ ಮಕ್ಕಳಿಗೆ ಬೇಸರವಾಗದ ರೀತಿ ಅವರಿಗೆ ಸಿಹಿ ನೀಡಲಾಗಿದೆ. ಜೊತೆಗೆ ಹೂ ನೀಡುವ ಮೂಲಕವೂ ಸ್ವಾಗತಿಸಿದ್ದು, ಮಕ್ಕಳ ಭವಿಷ್ಯ ಉಜ್ವಲವಾಗಿರಲಿ ಎಂದು ಆರೈಸಿದರು.
ಕಾರ್ಯಕ್ರಮದಲ್ಲಿ ಗುಡ್ಷಫರ್ಡ್ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಜಾರ್ಜ್ ಮೋಹನ್ ಕುಮಾರ್, ಟ್ರಸ್ಟ್ ಸದಸ್ಯ ರಿಚರ್ಡ್ ಥಾಮಸ್ ಕುಮಾರ್, ಸಂಸ್ಥಾಪಕ ಅಧ್ಯಕ್ಷ ಥಾಮಸ್ ಬೆಂಜಮಿನ್, ಕಾರ್ಯದರ್ಶಿ ಮೋರಿಸ್ ಜೈಕುಮಾರಿ, ಇಂಜಿನಿಯರ್ ಚನ್ನರಾಮು ಭಾಗವಹಿಸಿದ್ದರು.