ಅಕ್ರಮ ಚಟುವಟಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ

| Published : Jul 23 2025, 01:45 AM IST

ಅಕ್ರಮ ಚಟುವಟಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಓಸಿ, ಮಟ್ಕಾ, ಇಸ್ಪೀಟ್ ಜೂಜಾಟದ ಅಡ್ಡಾಗಳಿಗೆ ಕಡಿವಾಣ ಹಾಕಲಾಗುವುದು. ಮಹಿಳೆಯರ ಸುರಕ್ಷತೆಗೂ ನಿಗಾ ವಹಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ತಿಳಿಸಿದರು.

ಹಾವೇರಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಅಕ್ರಮ ಚಟುವಟಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ತಿಳಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಓಸಿ, ಮಟ್ಕಾ, ಇಸ್ಪೀಟ್ ಜೂಜಾಟದ ಅಡ್ಡಾಗಳಿಗೆ ಕಡಿವಾಣ ಹಾಕಲಾಗುವುದು. ಮಹಿಳೆಯರ ಸುರಕ್ಷತೆಗೂ ನಿಗಾ ವಹಿಸಲಾಗುವುದು. ಬರುವ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಇರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡದಂತೆ ಹೆಚ್ಚಿನ ನಿಗಾ ವಹಿಸಲಾಗುವುದು. ಸರ್ಕಾರ ಜಾರಿಗೆ ತಂದಿರುವ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲಾಗುವುದು ಎಂದರು.ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆಗಳಿದ್ದರೆ ಹಿಂಜರಿಕೆ ಮಾಡಿಕೊಳ್ಳದೆ ನೇರವಾಗಿ ಬಂದು ಭೇಟಿಯಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ಶಾಲಾ ಆವರಣದಲ್ಲಿ ರಾತ್ರಿ ವೇಳೆ ಧೂಮಪಾನ, ಮದ್ಯಪಾನ, ಮದ್ಯವ್ಯಸನಿಗಳ ಓಡಾಡುವಿಕೆ, ಬರ್ತಡೇ ಸೆಲೆಬ್ರೇಶನ್ ಮಾಡಿಕೊಳ್ಳುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಇಂದೇ ನೋಟಿಸ್ ಹೊರಡಿಸಲಾಗುವುದು ಎಂದರು.ಕೆಲ ದಿನಗಳ ಹಿಂದಷ್ಟೇ ಹಾನಗಲ್ಲ ತಾಲೂಕು ತಿಳವಳ್ಳಿಯಲ್ಲಿ ಪೊಲೀಸ್ ಠಾಣೆ ಮಂಜೂರಾಗಿದೆ. ಶೀಘ್ರದಲ್ಲಿ ಪೊಲೀಸ್ ಠಾಣಾ ಕಟ್ಟಡ, ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು ಎಂದರು.ಸಿಸಿ ಕ್ಯಾಮೆರಾ ಕಣ್ಗಾವಲು: ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಕಳ್ಳತನ, ದರೋಡೆಯಂತಹ ಪ್ರಕರಣಗಳನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಈ ಬಗ್ಗೆ ಸಾರ್ವಜನಿಕರ ಸಹಭಾಗಿತ್ವ ಕೂಡ ಮುಖ್ಯವಾಗಿದ್ದು, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಸಹಕಾರ ನೀಡಬೇಕು. ಹಳ್ಳಿಗಳಲ್ಲಿ 40ರಿಂದ 60 ಮನೆಗಳ ನಡುವೆ ಒಂದು, ಸಿಟಿಗಳಲ್ಲಿ ಜನದಟ್ಟಣೆ ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕಾಗಿದೆ. ಇದಕ್ಕೆ ಅಗತ್ಯ ಅನುದಾನವನ್ನೂ ಸ್ಥಳೀಯ ಸಂಸ್ಥೆಗಳು ಒದಗಿಸುವ ಕೆಲಸ ಮಾಡಬೇಕು ಎಂದರು.ಫುಟ್‌ಪಾತ್ ಒತ್ತುವರಿ ತೆರವುಗೊಳಿಸುವುದು, ಸಿಗ್ನಲ್ ದೀಪಗಳ ದುರಸ್ತಿ, ಹೆಚ್ಚುವರಿ ಸಿಗ್ನಲ್ ಅಳವಡಿಕೆಗೆ ಸ್ಥಳೀಯ ಸಂಸ್ಥೆಗಳ ಸಹಕಾರ ಬೇಕು. ರಾಣಿಬೆನ್ನೂರನಲ್ಲಿ ಏಕಮುಖ ರಸ್ತೆ ಮಾಡಲು ವರ್ತಕರಿಂದ ಅಪಸ್ವರ ಇದ್ದು, ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದರು.ಹೆಚ್ಚುವರಿ ಎಸ್‌ಪಿ ಲಕ್ಷ್ಮಣ ಶಿರಕೋಳ ಇದ್ದರು.