ಮಾದರಿ ನೀತಿಸಂಹಿತೆ ಪಾಲನೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ

| Published : Mar 17 2024, 02:02 AM IST

ಮಾದರಿ ನೀತಿಸಂಹಿತೆ ಪಾಲನೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಿರುವುದರಿಂದ ತಕ್ಷಣದಿಂದಲೇ ನೀತಿಸಂಹಿತೆ ಜಾರಿಗೆ ಬಂದಿದೆ. ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಅನುಕೂಲವಾಗುವಂತೆ ಮಾದರಿ ನೀತಿಸಂಹಿತೆ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್‌ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಭಾರತ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಿರುವುದರಿಂದ ತಕ್ಷಣದಿಂದಲೇ ನೀತಿಸಂಹಿತೆ ಜಾರಿಗೆ ಬಂದಿದೆ. ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಅನುಕೂಲವಾಗುವಂತೆ ಮಾದರಿ ನೀತಿಸಂಹಿತೆ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್‌ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಲೋಕಸಭಾ ಚುನಾವಣಾ ನೀತಿಸಂಹಿತೆ ಜಾರಿ ಹಿನ್ನೆಲೆಯಲ್ಲಿ ನಡೆದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ಮಾದರಿ ನೀತಿಸಂಹಿತೆ ತಕ್ಷಣವೇ ಜಾರಿಗೆ ಬಂದಿದೆ. ಸರ್ಕಾರ, ರಾಜಕೀಯ ಪಕ್ಷಗಳ ಹಾಗೂ ಚುನಾವಣಾ ಸಂಬಂಧಿತ ಎಲ್ಲ ಬಗೆಯ ಜಾಹೀರಾತುಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳದಲ್ಲಿರುವ ಭಿತ್ತಿಪತ್ರ, ಗೋಡೆಬರಹ, ಬ್ಯಾನರ್, ಕಟೌಟ್ 24 ಗಂಟೆಗಳಲ್ಲಿ ತೆರವುಗೊಳಿಸಬೇಕು. ಪ್ರವಾಸಿಮಂದಿರದಲ್ಲಿ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆಯಾ ತಹಸೀಲ್ದಾರರು ಅವುಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳಬೇಕು. ಯಾವುದೇ ರೀತಿಯ ಟೆಂಡರ್ ಆಹ್ವಾನ, ವರ್ಗಾವಣೆಗಳಿಗೆ ನಿರ್ಬಂಧವಿದೆ. ಸರ್ಕಾರಿ ಅಧಿಕಾರಿಗಳು ಅನಗತ್ಯವಾಗಿ ಯಾವುದೇ ರಾಜಕೀಯ ವ್ಯಕ್ತಿಗಳನ್ನು ಭೇಟಿ ಮಾಡುವಂತಿಲ್ಲ. ರಾಜಕೀಯ ಸಭೆ, ಸಮಾರಂಭಗಳಿಗೆ ಸುವಿಧಾ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅನುಮತಿ ನೀಡಬೇಕು. ರಾಜಕೀಯ ಸಭೆ, ಸಮಾರಂಭ ನಡೆಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಕೂಡಲೇ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಚುನಾವಣೆ ಆಯೋಗದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು, ಇಂದಿನಿಂದಲೇ ಎಲ್ಲ ಚೆಕ್ ಪೋಸ್ಟ್ ಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಚೆಕ್ ಪೋಸ್ಟ್ ಹಾಗೂ ಸುವಿಧಾ ಏಕಗವಾಕ್ಷಿ ತಕ್ಷಣವೇ ಕಾರ್ಯಾರಂಭಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಪರಸ್ಪರ ಸಮನ್ವಯತೆಗೆ ಅನುಕೂಲವಾಗುವಂತೆ ಪೊಲೀಸ್ ಹಾಗೂ ಇತರೆ ಸೆಕ್ಟರ್ ಅಧಿಕಾರಿಗಳ ತಂಡ ರಚಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಬೆಳಗಾವಿ ಉತ್ತರ ವಲಯ ಐಜಿಪಿ ವಿಕಾಶ್ ಕುಮಾರ್ ವಿಕಾಶ್, ಡಿಸಿಪಿ ರೋಹನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ಸಹಾಯಕ ಚುನಾವಣಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.