ಸಾರಾಂಶ
ಧಾರವಾಡ:
ಬಾಲ ಕಾರ್ಮಿಕರು ಪತ್ತೆಯಾದ ಪ್ರಕರಣಗಳಲ್ಲಿ ದುಡಿಸಿಕೊಳ್ಳುವ ಮಾಲೀಕನೊಂದಿಗೆ ಪತ್ತೆಯಾದ ಮಕ್ಕಳ ಪಾಲಕರ ವಿರುದ್ಧವು ಪ್ರಕರಣ ದಾಖಲಿಸಿ, ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಮಾಲೀಕ ಮತ್ತು ಪಾಲಕ ಇಬ್ಬರನ್ನು ಜವಾಬ್ದಾರಗೊಳಿಸಿದಾಗ ಪ್ರಕರಣದ ಗಂಭೀರತೆ ಅರ್ಥವಾಗಿ, ಬಾಲಕಾರ್ಮಿಕ ಪದ್ಧತಿ ನಿಯಂತ್ರಣವಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಸಭೆ ಮತ್ತು ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ ಸಭೆ ಜರುಗಿಸಿದ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ದೊಡ್ಡದು. ಇಲ್ಲಿನ ಸಣ್ಣ, ಮಧ್ಯಮ ಉದ್ಯಮಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ, ದೈಹಿಕ ಬೆಳವಣಿಗೆ ಕುಂಠಿತವಾಗಿ, ಪ್ರಗತಿಯಿಂದ ಹಿಂದೆ ಉಳಿಯುತ್ತಾರೆ. ಆದ್ದರಿಂದ ಕಾರ್ಮಿಕ ಇಲಾಖೆ ಅಧಿಕಾರಿಗಳು ಇತರ ಇಲಾಖೆ ಅಧಿಕಾರಿಗಳ ಸಹಕಾರ, ಸಮನ್ವಯದಲ್ಲಿ ಇಟ್ಟಂಗಿ ಬಟ್ಟಿ, ಹೋಟೆಲ್, ಬೇಕರಿ, ಖಾನಾವಳಿ ಸೇರಿದಂತೆ ಇತರ ಉದ್ಯಮ ಸ್ಥಳಗಳ ಮೇಲೆ ನಿರಂತರ ದಾಳಿ ಮಾಡಿ, ಮಕ್ಕಳನ್ನು ರಕ್ಷಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಮಾತನಾಡಿ, ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಮಹಿಳೆಯರು ಚಿಕ್ಕಮಕ್ಕಳನ್ನು ಮೈಗೆ ಕಟ್ಟಿಕೊಂಡು ಭಿಕ್ಷೆ ಬೇಡುತ್ತಾರೆ. ಇದನ್ನು ನಿಯಂತ್ರಿಸಬೇಕು. ಶಾಲೆಗೆ ಓದಲು ಬಾಲಕಾರ್ಮಿಕರನ್ನು ಸೇರಿಸಿದ ಬಗ್ಗೆ ಮಾಹಿತಿ ನೀಡಿದರೆ, ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಲು ಸಹಾಯವಾಗುತ್ತದೆ ಎಂದು ಹೇಳಿದರು.ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಸಂಗಮ, ಕಳೆದ ವರ್ಷ 27 ದಿಢೀರ್ ದಾಳಿ ಮತ್ತು ಪ್ರಸಕ್ತ ವರ್ಷ 34 ಅನಿರೀಕ್ಷಿತ ದಾಳಿ ಕೈಗೊಂಡು 35 ಮಕ್ಕಳನ್ನು ರಕ್ಷಿಸಲಾಗಿದೆ. ಪ್ರಸಕ್ತ ವರ್ಷ 7 ಪ್ರಕರಣ ದಾಖಲಿಸಿ ₹ 1.10 ಲಕ್ಷ ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜೂ. 12ರಂದು ಜಿಲ್ಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದೆ. ಬಾಲಕಾರ್ಮಿಕ ಮುಕ್ತ ಜಿಲ್ಲೆ ಆಗಿಸುವ ನಿಟ್ಟಿನಲ್ಲಿ ಅಗತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಜಿಲ್ಲಾ ಬಾಲಕಾರ್ಮಿಕ ಸಂಘದ ಯೋಜನಾ ಅಧಿಕಾರಿ ಬಸವರಾಜ ಪಂಚಾಕ್ಷರಿಮಠ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಿಎಚ್ಒ ಡಾ. ಶಶಿ ಪಾಟೀಲ ಇದ್ದರು.