ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಹನೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಭರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮುಖ್ಯಸ್ಧರು ಶ್ರಮಿಸಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ. ಆರ್. ಮಂಜುನಾಥ್ ಹೇಳಿದರು.ಪಟ್ಟಣದ ಬಿಆರ್ಸಿ ಕಚೇರಿಯಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಜೊತೆಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಹನೂರು ಶೈಕ್ಷಣಿಕ ವಲಯದಲ್ಲಿ ಕಳೆದ 2024-25 ನೇ ಸಾಲಿನಲ್ಲಿ ಕಡಿಮೆ ಫಲಿತಾಂಶ ಬಂದಿದೆ. ಇದು ಸರಿಯಾದ ಬೆಳವಣಿಗೆ ಅಲ್ಲ. ಹಾಗಾಗಿ ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಒಳ್ಳೆಯ ಉತ್ತಮವಾದ ಫಲಿತಾಂಶ ಬಾರದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ನಿಮಗೆ ಯಾವ ರೀತಿಯ ಸಹಕಾರ ಬೇಕು ನಾನು ನಿಮ್ಮ ಜೊತೆಗೆ ಇರುತ್ತೇನೆ. ಒಳ್ಳೆಯ ಫಲಿತಾಂಶ ತರುವ ನಿಟ್ಟಿನಲ್ಲಿ ನಿಮ್ಮ ಮಕ್ಕಳಂತೆ ನಮ್ಮ ಶಾಲೆಯ ಮಕ್ಕಳು ಎಂಬ ಭಾವನೆ ನಿಮ್ಮಲ್ಲಿ ಬರಬೇಕು. ಹಾಗಾಗಿ ಎಲ್ಲ ಮುಖ್ಯ ಶಿಕ್ಷಕರೂ ಸಹ ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಮಕ್ಕಳನ್ನು ಒಳ್ಳೆಯ ವಿದ್ಯಾಭ್ಯಾಸ ನೀಡಿ ಉತ್ತಮ ಫಲಿತಾಂಶ ಬರಲು ಮುಂದಾಗಬೇಕು ಎಂದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಕಡಿಮೆ ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡು ಉತ್ತಮವಾದ ಪಾಠ ಪ್ರವಚನ ಮಾಡಬೇಕು. ಇಲ್ಲವಾದಲ್ಲಿ ಫಲಿತಾಂಶ ಕುಂಠಿತವಾಗುತ್ತದೆ. ಹಾಗಾಗಿ ನೀವು ಅತ್ಯಂತ ದಕ್ಷತೆಯಿಂದ ಕೆಲಸ ಮಾಡಬೇಕಿದೆ. ಇಲ್ಲವಾದರೆ ಖಂಡಿತ ನಮ್ಮ ಕ್ಷೇತ್ರ ಬಿಟ್ಟು ತೆರಳಬಹುದು ಎಂದು ತರಾಟೆಗೆ ತೆಗೆದುಕೊಡರು.ಶಿಕ್ಷಕರ ಕೊರತೆ:
ಹನೂರು ಶೈಕ್ಷಣಿಕ ವಲಯದಲ್ಲಿ ಬಹುತೇಕ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಶಿಕ್ಷಕರ ಕೊರತೆ, ಇಂಗ್ಲೀಷ್ ಶಿಕ್ಷಕರು, ಹಿಂದಿ ಶಿಕ್ಷಕರ ಕೊರತೆ ಕಾಡುತ್ತಿದೆ. ಹಾಗಾಗಿ ಈ ಬಾರಿ ಫಲಿತಾಂಶ ಹಿನ್ನೆಡೆಯಾಗಿದೆ ಎಂದು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು. ಈ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಶಾಸಕರು ತಿಳಿಸಿದರು.ಸಮಯಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ:ಕಾಡಂಚಿನ ಗ್ರಾಮಗಳಿಗೆ ತೆರಳುತ್ತಿರುವ ಸರ್ಕಾರಿ ಬಸ್ ಗಳು ಸಮಯಕ್ಕೆ ಸರಿಯಾಗಿ ತೆರಳುತ್ತಿಲ್ಲ. ಇದರಿಂದ ಶಾಲಾ ಸಮಯಕ್ಕೆ ತಲುಪಲು ಆಗುತ್ತಿಲ್ಲ ಎಂಬ ವಿಷಯ ತಿಳಿಯುತ್ತಿದ್ದಂತೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಗಮನಕ್ಕೆ ತಂದು ಸಮಯಕ್ಕೆ ಸರಿಯಾಗಿ ಬಿಡಿಸುವ ಪ್ರಯತ್ನ ಮಾಡುತ್ತೇನೆ ಎಂದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಜೊತೆ ಮಾತನಾಡಿ ಅದನ್ನು ಖುದ್ದು ಭೇಟಿ ನೀಡಿ ಪರಿಶೀಲನೆ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಬಿ ಆರ್ ಸಿ ವೆಂಕಟೇಶ್, ಶಿಕ್ಷಣ ಸಂಯೋಜಕರಾದ ಅಶೋಕ್,ಚಿನ್ನಪ್ಪಯ್ಯ, ಸೇರಿದಂತೆ ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು.