ಧಾರವಾಡ:

ಪ್ರಶ್ನೆಪತ್ರಿಕೆ ಸೋರಿಕೆಯಂಥ ಪ್ರಕರಣ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸುತ್ತೇವೆ. ನಾಗರಿಕ ಪರೀಕ್ಷೆ ಅಕ್ರಮ ತಡೆ ಕಾನೂನಿಗೆ (2024) ತಿದ್ದುಪಡಿ ಮಾಡಿದ್ದು, ತಪ್ಪಿತಸ್ಥರಿಗೆ 10 ವರ್ಷ ಶಿಕ್ಷೆ ಮತ್ತು ₹ 10 ಕೋಟಿ ದಂಡ ವಿಧಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪರೀಕ್ಷಾ ವ್ಯವಸ್ಥೆಯನ್ನು ಬಲಗೊಳಿಸಿ ಸುಧಾರಣೆ ನಿಟ್ಟಿನಲ್ಲಿ ಕ್ರಮ ವಹಿಸುತ್ತೇವೆ. ನೀಟ್‌ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಬಹಳ ವಿವರವಾಗಿ ಮಾತನಾಡಿದ್ದಾರೆ ಎಂದರು.

ಹಿಂದೆ ಈ ರೀತಿಯ ಹಲವು ಘಟನೆಗಳು ಹಾಗೂ 58 ಬಾರಿ ಯುಪಿಎಸ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಆದಾಗ ಯಾವುದೇ ಕ್ರಮಕೈಗೊಂಡಿಲ್ಲ. ಆದರೂ ನಾವು ಅವುಗಳ ಬಗ್ಗೆ ಮಾತನಾಡುವುದಿಲ್ಲ ಎಂದ ಜೋಶಿ, ಇದೀಗ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರನ್ನು ಬಂಧಿಸಿ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು. 22 ಲಕ್ಷ ವಿದ್ಯಾರ್ಥಿಗಳಿಗೆ ಮರು ನೀಟ್‌ ಪರೀಕ್ಷೆ ನಡೆಸಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದಿರುವ ಜೋಶಿ, ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಅರ್ಹ ವಿದ್ಯಾರ್ಥಿಗಳ ಬಗ್ಗೆ ನಾವು ಸಂವೇದನಾಶೀಲರಾಗಿದ್ದೇವೆ. ಆದರೆ, ಅಲ್ಲಿ ಕಲ್ಲು ಹೊಡೆಯುವ, ಮಹಿಳಾ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಆತಂಕಕಾರಿ ಸಂಗತಿ. ಇಂತಹ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದರು.

ಉಮರ್ ಖಾಲೀದ್ ಪರ ಘೋಷಣೆ ಕೂಗಿರುವುದನ್ನು ಖಂಡಿಸಿದ ಜೋಶಿ, ಸಿಜೆಪಿ ಪ್ರತಿಭಟನೆಯಲ್ಲಿ ಆಮ್ ಆದ್ಮಿಯ ಹಫೀಜ್ ಒಬ್ಬ ಕ್ರಿಮಿನಲ್. ಉಮರ್ ಖಾಲೀದ, ಆರ್ಟಿಕಲ್ 370 ವಿರುದ್ಧವಾಗಿ ಮಾತನಾಡಿರುವುದು ಕಂಡು ಬಂದಿದೆ. ನಾವು ನಿಜವಾದ ವಿದ್ಯಾರ್ಥಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಹೇಳಿದ್ದೇವೆ ಎಂದರು.


ನಿರಾಕರಣೆ:

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಜೋಶಿ, ಈ ಬಗ್ಗೆ ನಾನೇನು ಹೇಳಲ್ಲ ಎಂದು ಅಲ್ಲಿಂದ ತೆರಳಿದರು.