ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಣದಲ್ಲಿರುವ ಅಭ್ಯರ್ಥಿಗಳು ಚುನಾವಣೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾಮಾನ್ಯ ವೀಕ್ಷಕ ಪಾರುಲ್ ಪಟವಾರಿ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಣದಲ್ಲಿರುವ ಅಭ್ಯರ್ಥಿಗಳು ಚುನಾವಣೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾಮಾನ್ಯ ವೀಕ್ಷಕ ಪಾರುಲ್ ಪಟವಾರಿ ಸೂಚನೆ ನೀಡಿದರು.ಉಪವಿಭಾಗಾಧಿಕಾರಿಗಳ ಸಭಾಂಗಣದಲ್ಲಿಂದು ಉಪಚುನಾವಣೆ ಕಣದಲ್ಲಿರುವ ಅಭ್ಯರ್ಥಿ ಅಥವಾ ಪ್ರತಿನಿಧಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಪ ಚುನಾವಣೆ ಪ್ರಕ್ರಿಯೆ ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅಭ್ಯರ್ಥಿಗಳು ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬಾರದು.
ಅಭ್ಯರ್ಥಿಗಳಿಗೆ ಮತದಾರರ ಮೇಲೆ ಪ್ರಭಾವ ಬೀರುವಂತಹ ಅನಧಿಕೃತ ಚಟುವಟಿಕೆ ಕೈಗೊಳ್ಳಬಾರದರು. ಹಣ, ಮಧ್ಯ ಅಥವಾ ಉಡುಗೊರೆಗಳ ವಿತರಣೆ ನಿಷೇಧಿತವಾಗಿದ್ದು, ಈ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದೆ. ಇಂತಹ ಪ್ರಕರಣ ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಠಿಣ ನಿಗಾ ವಹಿಸುವುದಾಗಿ ತಿಳಿಸಿದರು. ಯಾವುದೇ ದೂರುಗಳಿದ್ದಲ್ಲಿ ನೇರವಾಗಿ ವೀಕ್ಷಕರ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಗಮನಕ್ಕೆ ತರಬಹುದಾಗಿದೆ ಎಂದು ತಿಳಿಸಿದರು.ಚುನಾವಣೆ ಪ್ರಚಾರ ವೇಳೆ ಧ್ವನಿವರ್ಧಕಗಳ ಬಳಕೆ, ವಾಹನಗಳ ಅನುಮತಿ, ಸಭೆ-ಸಮಾವೇಶಗಳ ಆಯೋಜನೆ ಸೇರಿದಂತೆ ಇತರೆ ರ್ಯಾಲಿಗಳಿಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳಿಗೆ ನೀಡಿ ಅನುಮತಿ ಪಡೆದುಕೊಳ್ಳಬಹುದಾಗಿದೆ. ಪ್ರತಿಯೊಂದು ಅನುಮತಿಗಳಿಗೆ ಸಿಂಗಲ್ ವಿಂಡೋ ತೆರೆಯಲಾಗಿದೆ. ಪ್ರಚಾರದ ಮೇಳೆ ಮಕ್ಕಳನ್ನು ಬಳಕೆ ಮಾಡಿಕೊಳ್ಳುವಂತಿಲ್ಲ. ಅನುಮತಿ ಪಡೆಯದೇ ಇದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಪತ್ರಿಕೆ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ನೀಡಬೇಕಾದಲ್ಲಿ ಎಂಸಿಎಂಸಿ ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ, ಸೋಸಿಯಲ್ ಮೀಡಿಯಾ, ಪೇಯ್ಡ್ ನ್ಯೂಸ್ಗಳ ಮೇಲೆ ನಿಗಾವಹಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ 322 ಮತಗಟ್ಟೆಗಳಿದ್ದು, ಪ್ರತಿಯೊಂದು ಮತಗಟ್ಟೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗಿದೆ. 85 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣೆ ಆಯೋಗ ಅವಕಾಶ ಕಲ್ಪಿಸಲಾಗಿದೆ. ಹೆಚ್ಚುವರಿಯಾಗಿ ಸ್ಥಾಪಿಸಲಾದ ಮೂರು ಮತಗಟ್ಟೆಗಳಿಗೆ ಬೂತ ಮಟ್ಟದ ಎಜೆಂಟರನ್ನು ನೇಮಕ ಮಾಡಲು ತಿಳಿಸಿದರು. ಪೊಲೀಸ್ ವೀಕ್ಷಕರಾದ ಆನಂದ ರೋಹಣ ಆನಂದ ಲ್ಯಾಂಡ್ ಆರ್ಡರ್ ಪಾಲನೆ ಆಗಬೇಕು ಎಂದರು.ಎಂಸಿಸಿ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಚುನಾವಣೆಯಲ್ಲಿ ಯಾವುದೇ ರೀತಿಯಲ್ಲಿ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಸಭೆ, ಸಮಾವೇಶಗಳಿದ್ದಾಗ ವೇದಿಕೆ ಪ್ರಾರಂಭವಾಗುವ 2 ಗಂಟೆ ಮುಂಚಿತವಾಗಿ ವೇದಿಕೆ ಹಾಕಿ ನಂತರ ಮುಗಿದ ಒಂದು ಗಂಟೆಯಲ್ಲಿ ಅದನ್ನು ತೆರವುಗೊಳಿಸುವ ಕೆಲಸವಾಗಬೇಕು. ದಾಖಲೆ ಇಲ್ಲದೇ ₹50 ಸಾವಿರ ತೆಗೆದುಕೊಂಡು ಹೋಗಲು ಅವಕಾಶವಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಚುನಾವಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರಾದ ವಾಸುದೇವ ಸ್ವಾಮಿ, ಡಾ.ಪ್ರದೀಪಕುಮಾರ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಚುನಾವಣಾ ಅಭ್ಯರ್ಥಿಗಳು ಅಥವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.