ಸಾರಾಂಶ
ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾಭ್ಯಾಸ ಪಡೆಯಲು ನೆರವಾಗಿ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಹೇಳಿದ್ದಾರೆ.
- ಎಸ್.ಪಿ. ಕಚೇರಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾಭ್ಯಾಸ ಪಡೆಯಲು ನೆರವಾಗಿ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಹೇಳಿದರು.ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕೆಲ ಮಕ್ಕಳು ವಿವಿಧ ರೀತಿಯ ದುಶ್ಚಟಗಳಿಗೆ ಹಾಗೂ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಅಂತಹ ಮಕ್ಕಳಿಗೆ ಜಾಗೃತಿ ಮೂಡಿಸಿ, ಶಿಕ್ಷಣದ ಮಹತ್ವ ತಿಳಿಸಬೇಕು. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದೆ. ಸಂಬಂಧಪಟ್ಟವರು ಸೂಕ್ತ ಮಾಹಿತಿಯೊಂದಿಗೆ ಪ್ರಕರಣ ದಾಖಲಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಮತ್ತಷ್ಟು ಅರಿವು ಮೂಡಿಸಲಾಗುವುದು. ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ ದಲಿತ ಮುಖಂಡರು ಕೇಳಿದ ಪ್ರಶ್ನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಆ ಮೂಲಕ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಿ, ಪ್ರತಿ ನಾಗರೀಕನಿಗೂ ಸಮಾನ ನ್ಯಾಯ ದೊರಕಿಸುವುದೇ ಈ ಸಭೆಯ ಉದ್ದೇಶವಾಗಿದೆ ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಮಂಜುನಾಥ, ವಿಜಯ ಕುಮಾರ್ ಎನ್. ಸಂತೋಷ್, ಅಬಕಾರಿ ಉಪ ಆಯುಕ್ತ ಸಿ.ಎನ್.ಜುನೈ, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ದಲಿತ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.- - - -7ಕೆಡಿವಿಜಿ44.ಜೆಪಿಜಿ:
ದಾವಣಗೆರೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಎಸ್ಪಿ ಉಮಾ ಪ್ರಶಾಂತ್ ಇತರರು ಇದ್ದರು.