ಇಂಡಿ ನಗರದ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಕೋಣೆಯ ಬಾಗಿಲು ಹಾಕಿಕೊಂಡು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕನ್ನಡಪ್ರಭ ವಾರ್ತೆ ಇಂಡಿ
ನಗರದ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಕೋಣೆಯ ಬಾಗಿಲು ಹಾಕಿಕೊಂಡು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ತಾಲೂಕಿನ ಮಾವಿನಹಳ್ಳಿ ಗ್ರಾಮದ ಅಭಿಜಿತ ಸಮಗಾರ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದು, ಇಂಡಿಯಲ್ಲಿನ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ವಾಸಿಸುತ್ತಿದ್ದ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಇಂಡಿ ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು, ಎಸಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ್ ನಾಗೇಂದ್ರ ಭೇಟಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಂದೆ ಭೀಮಪ್ಪ ಸಮಗಾರ ಗ್ರಾಮಕ್ಕೆ ಬಂದಿದ್ದ ಮಗ ಅಭಿಜಿತ್ ನನ್ನು ಮಂಗಳವಾರ ದ್ವಿಚಕ್ರವಾಹನ ಮೇಲೆ ಇಂಡಿಗೆ ಕರೆತಂದು ಬಸ್ ಹಿಡಿದುಕೊಂಡು ಕಾಲೇಜಿಗೆ ಹೋಗುವಂತೆ ಹೇಳಿ ಬಸ್ ನಿಲ್ದಾಣದಲ್ಲಿ ಇಳಿಸಿ ಹೋಗಿದ್ದರು. ಹಾಸ್ಟೆಲ್ಗೆ ಹೋದ ಅಭಿಜಿತ್ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಂಬಂಧಿಕರಿಗೆ ವಾಟ್ಸಾಪ್ ಮೆಸೇಜ್ ಕಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.