ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಇಂದು ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ ವಾತಾವರಣ ಲಭ್ಯವಿದೆ ಎಂದು ಸಮಾಜ ಸೇವಕ, ಲೀಡಿಂಗ್ ಎಡ್ಜ್ ಸಂಸ್ಥೆಯ ಮುಖ್ಯಸ್ಥ ಎಡಿಕೇರಿ ಪ್ರಸನ್ನ ಅಭಿಪ್ರಾಯಪಟ್ಟರು.ಪಟ್ಟಣದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಅಂಗವಾಗಿ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲೂಕಿನ ಸರ್ಕಾರಿ ಶಾಲೆ, ಕಾಲೇಜಿನ ಆಯ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದುವ ಬಗ್ಗೆ ಯಾವುದೇ ರೀತಿಯ ಕೀಳರಿಮೆ ಹೊಂದಬಾರದು. ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಓದಿದ ಅನೇಕರು ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಭಾರತದ ರಾಷ್ಟ್ರಪತಿ, ಪ್ರಧಾನಮಂತ್ರಿ ಸೇರಿದಂತೆ ಹಲವು ಗಣ್ಯರು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡಿದ್ದಾರೆ ಎಂದರು. ಅತಿ ಹೆಚ್ಚು ಅಂಕಗಳನ್ನು ಪಡೆದ ಎಸ್ಎಸ್ಎಲ್ಸಿ ವಿಭಾಗದಲ್ಲಿ ಕಿರಗಂದೂರು ಸರ್ಕಾರಿ ಪ್ರೌಢಶಾಲೆಯ ಅಶ್ವಧಿ, ನೇರುಗಳಲೆ ಪ್ರೌಢಶಾಲೆಯ ನಿರೀಕ್ಷಾ, ಪಿಯುಸಿ ವಿಭಾಗದಲ್ಲಿ ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಂಕಿತ, ಐಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಯಶಸ್ವಿ ಹಾಗೂ ಮಾದಾಪುರ ಮೊರಾರ್ಜಿ ಪದವಿ ಪೂರ್ವ ಕಾಲೇಜಿನ ಧ್ರುವ ಅವರನ್ನು ಸನ್ಮಾನಿಸಲಾಯಿತು. ಎಡಿಕೇರಿ ಪ್ರಸನ್ನ ಅವರು ವಿದ್ಯಾರ್ಥಿಗಳಿಗೆ ತಲಾ ೫ ಸಾವಿರ ರು. ಪ್ರೋತ್ಸಾಹಧನ ನೀಡಿದರು. ಪತ್ರಕರ್ತರ ವರದಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ೨೫ ಸಾವಿರ ರು. ದತ್ತಿ ನಿಧಿಯನ್ನು ಘೋಷಿಸಿದರು. ಮಾದಾಪುರ ಗ್ರಾಪಂ ಮಾಜಿ ಸದಸ್ಯ ಲತೀಫ್ ಅವರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿ ನಿಧಿಗೆ ೧೦ ಸಾವಿರ ರು. ದೇಣಿಗೆ ನೀಡಿದರು.ಇದೇ ಸಂದರ್ಭ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ವತಿಯಿಂದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ೫೦ ಸಾವಿರ ರು. ದೇಣಿಗೆ ನೀಡಲಾಯಿತು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ, ತಾಲೂಕು ಘಟಕದ ಅಧ್ಯಕ್ಷ ವಿಶ್ವ ಕುಂಬೂರು, ಜಿಲ್ಲಾ ಸಂಘದ ಉಪಾಧ್ಯಕ್ಷ ವಾಸು ಇದ್ದರು.