ಸಾರಾಂಶ
ಗದಗ:ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಇಂದಿನ ವಿದ್ಯಾರ್ಥಿಗಳೆ ಮುಂದೆ ದೇಶದ ಸಂಪತ್ತು. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುತ್ತಿರುವುದು ಸಂತಸದ ಸಂಗತಿ ಎಂದು ವಿಪ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.ನಗರದ ಕನಕ ಭವನದಲ್ಲಿ ನಡೆದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕಾಳಿದಾಸ, ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿ ನಿಲಯ ಹಳೆ ವಿದ್ಯಾರ್ಥಿಗಳ ಸಂಘ, ಕರ್ನಾಟಕ ಪ್ರದೇಶ ಕುರುಬರ ಸಂಘ, ರಾಕೇಶ ಸಿದ್ದರಾಮಯ್ಯ ಟ್ರಸ್ಟ ಹಾಗೂ ಕಾಳಿದಾಸ ಶಿಕ್ಷಣ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಸ್ವತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅಲ್ಪಾವಧಿ ಕೌಶಲ್ಯಾಧರಿತ ಕೋರ್ಸುಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಕಿಟ್ ವಿತರಣೆ ಹಾಗೂ ರಾಕೇಶ ಸಿದ್ದರಾಮಯ್ಯ ಶಿಷ್ಯವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳು ಮತ್ತು ತಂತ್ರಜ್ಞಾನಗಳನ್ನು ಕಲಿಯಬೇಕು ಮತ್ತು ಭವಿಷ್ಯದಲ್ಲಿ ಅವುಗಳನ್ನು ಅಳವಡಿಸಿಕೊಳ್ಳಬೇಕು. ಮಕ್ಕಳು ಸಮಾಜದ ಅಭಿವೃದ್ಧಿಗೆ ಸಮಾಜದಲ್ಲಿ ಬದಲಾವಣೆಗಳನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ನೈತಿಕ ಮೌಲ್ಯಗಳ ಸಂರಕ್ಷಕರಾಗಿದ್ದು, ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುತ್ತಾರೆ ಮತ್ತು ಸಂಸ್ಕೃತಿಯನ್ನು ರಕ್ಷಿಸುತ್ತಾರೆ ಎಂದರು.ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಿಕ್ಷಣದ ಬಗ್ಗೆ ಹಗಲಿರಳು ಚಿಂತನೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ನಗರದ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಪ್ರಾಮುಖ್ಯತೆ ಪಡೆದಿದೆ. ಕುರುಬರ ಸಂಘ ಸ್ಥಾಪನೆಯಾದ ನಂತರ ಜಿಲ್ಲೆಯಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ. ರಾಕೇಶ ಸಿದ್ದರಾಮಯ್ಯ ಅವರ ಸ್ಮರಣೆಯೊಂದಿಗೆ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವ ಮೂಲಕ ಅವರ ಹೆಸರನ್ನು ಅಜರಾಮರಗೊಳಿಸಿದ್ದಾರೆ ಎಂದರು.ವಿಪ ಸದಸ್ಯ ಎಸ್.ವಿ. ಸಂಕನೂರ ಅವರು ಮಾತನಾಡಿ, 21ನೇ ಶತಮಾನ ಜ್ಞಾನಯುಗವಾಗಿದೆ. ಜ್ಞಾನ ಮತ್ತು ಕೌಶಲ್ಯ ಹೊಂದಿದ ವಿದ್ಯಾರ್ಥಿಗಳಿಗೆ ಉನ್ನತ ಸ್ಥಾನಮಾನ, ಗೌರವ ಸಿಕ್ಕೇ ಸಿಗುತ್ತದೆ. ವಿದ್ಯೆಗಿಂತ ಮಿಗಿಲಾದ ವಸ್ತು ಯಾವುದು ಇಲ್ಲ, ಶ್ರೀಮಂತಿಕೆ, ಅಧಿಕಾರ ಶಾಶ್ವತವಲ್ಲ ಆದರೆ, ಶಿಕ್ಷಣ ನಮ್ಮ ಕೊನೆಯವರೆಗೂ ಇರುತ್ತದೆ ಎಂದರು.ಹೆಸ್ಕಾಂ ನಿಗಮದ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಮಾತನಾಡಿ, ರಾಕೇಶ್ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಶಿಷ್ಯವೇತನ ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಕುರುಬರ ಸಂಘ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರು, ನಟರಾಜ ಜಿ.ಆರ್, ಶಶಿಧರ ರೊಳ್ಳಿ, ಬಸವರಾಜ ಗೊರವರ, ರಾಮಕೃಷ್ಣ ರೊಳ್ಳಿ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಕೆ.ಎಚ್. ಪಾಟೀಲ, ಚನ್ನಮ್ಮ ಹುಳಕಣ್ಣವರ, ನೌಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ, ರವಿ ಗುಂಜಿಕಾರ, ಪ್ರಕಾಶ ಕರಿ ಸೇರಿದಂತೆ ಮುಂತಾದವರು ಇದ್ದರು.