ಸಾರಾಂಶ
ಗುರುವಾರ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಕಟ್ಟಡದಲ್ಲಿ ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಹಾಗೂ ಸುವಿದ್ಯಾರಂಭವನ್ನು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಶ್ರೀಗಳು ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಕುಂದಾಪುರ
ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗೆ ಶಾಲಾ ಕಾಲೇಜುಗಳಲ್ಲಿ ಸೂಕ್ತ ಪ್ರೋತ್ಸಾಹ ನೀಡಿದರೇ ಖಂಡಿತ ಅಂತಹ ವಿದ್ಯಾರ್ಥಿಗಳು ಸಮಾಜಕ್ಕೆ ದೇಶಕ್ಕೆ ಅಮೂಲ್ಯ ಕೊಡುಗೆಗಳಾಗುತ್ತವೆ. ಎಲ್ಲಾ ವಿದ್ಯಾಸಂಸ್ಥೆಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಶ್ರೀಗಳು ಆಶಯ ವ್ಯಕ್ತಪಡಿಸಿದರು.ಗುರುವಾರ ಇಲ್ಲಿನ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಕಟ್ಟಡದಲ್ಲಿ ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಹಾಗೂ ಸುವಿದ್ಯಾರಂಭವನ್ನು ನೆರವೇರಿಸಿ ಆಶೀರ್ವಚನ ನೀಡಿದರು.ಪ್ರತಿಭೆಗೆ ಸೂಕ್ತ ಪ್ರೋತ್ಸಾಹ, ಭಾರತೀಯ ಸಂಸ್ಕಾರ ಹಾಗೂ ವ್ಯಕ್ತಿತ್ವದ ಬೆಳವಣಿಗೆಗೆ ಅವಶ್ಯಕವಾದ ಶಿಕ್ಷಣ, ವಿದ್ಯಾರ್ಥಿಯ ಸರ್ವತೋಮುಖ ಪ್ರಗತಿಗೆ ಕಾರಣವಾಗುತ್ತವೆ. ಈ ನಿಟ್ಟಿನಲ್ಲಿ ಸುಜ್ಞಾನ ವಿದ್ಯಾಸಂಸ್ಥೆಯ ಚಿಂಚನೆ, ಯೋಚನೆಗಳು ಶ್ಲಾಘನೀಯ ಎಂದರು.ಸುಜ್ಞಾನ ವಿದ್ಯಾಸಂಸ್ಥೆ ಅತ್ಯಂತ ಅಲ್ಪಾವಧಿಯಲ್ಲಿ ಗುಣಮಟ್ಟದ ಶಿಕ್ಷಣದ ಮೂಲಕ ಜನಮಾನಸ ತಲುಪಿದೆ. ಈ ಭಾಗದಲ್ಲಿ ಉತ್ತಮ ಶಿಕ್ಷಣ ನೀಡುವ ವಿದ್ಯಾಸಂಸ್ಥೆಯ ಅವಶ್ಯಕತೆ ಇದ್ದು, ಈ ವಿದ್ಯಾಸಂಸ್ಥೆಯ ಮೂಲಕ ಅಗತ್ಯತೆ ಈಡೇರಿದೆ. ಉತ್ತಮ ಸಂಸ್ಕಾರಯುತವಾದ ಶಿಕ್ಷಣವನ್ನು ನೀಡುವಲ್ಲಿ ಈ ಶಿಕ್ಷಣ ಸಂಸ್ಥೆಯ ಧೈಯ ಗಮನಿಸಬಹುದಾಗಿದೆ ಎಂದರು.ಸೌಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ, ನಿವೃತ್ತ ಪ್ರಾಂಶುಪಾಲ ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ ಆಗಮಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಉಪಸ್ಥಿತರಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತಗಳನ್ನಾಡಿದರು.