ಕನ್ನಡಪ್ರಭವಾರ್ತೆ ಕುಶಾಲನಗರ

ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಈ ತಿಂಗಳ 18 ರಿಂದ ಆರಂಭಗೊಂಡಿದೆ. ಕುಶಾಲನಗರ ಸಮೀಪದ ಮದಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯುತ್ತಿರುವ ಶಿಬಿರಕ್ಕೆ ಕುಶಾಲನಗರ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ ಬಿ ಆರ್ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮನ್ನು ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಲ್ಲಿ ಯಾವುದೇ ನಿಯಮಬಾಹಿರ ಅಥವಾ ಅಪರಾಧ ಚಟುವಟಿಕೆಗಳಲ್ಲಿ ತೊಡಗದಂತೆ ಎಚ್ಚರ ಅಗತ್ಯ ಎಂದರು. ಪರಿಸರ ಉಳಿಸುವಲ್ಲಿ ಯುವ ಜನತೆಯ ಪಾತ್ರ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ ಎನ್ ಚಂದ್ರಮೋಹನ್ ಮಾತನಾಡಿ, ಪರಿಸರ ಪ್ರಕೃತಿಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಉತ್ತಮ ಪರಿಸರವನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಿದೆ ಎಂದರು. ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ಹಾಗೂ ಶಿಬಿರದ ನಿರ್ದೇಶಕ ಸತೀಶ್ ಕಾಳೆ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಎಂ ರೇಣುಕಾ, ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷರಾದ ಡಿ ಆರ್ ದಿನೇಶ್, ಕಾರ್ಯದರ್ಶಿ ಸ್ವಾಮಿ ಮತ್ತಿತರರು ಮಾತನಾಡಿ ಶಿಬಿರಾರ್ಥಿಗಳಿಗೆ ಶುಭ ಕೋರಿದರು.ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಚಿಮ್ಮಿ ಸುಶೀಲ ದೇವಕಿ, ಕಾವೇರಿ ಮತ್ತು ಕಾರ್ಯಕ್ರಮ ಅಧಿಕಾರಿ ಕೆಪಿ ವಿನಯ್, ಜಿ ಜಯಣ್ಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಜಿ ಜಯಣ್ಣ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಈ ತಿಂಗಳ 24 ರ ತನಕ ನಡೆಯುವ ಶಿಬಿರದಲ್ಲಿ ಶ್ರಮದಾನ, ಜನ ಜಾಗೃತಿ ಕಾರ್ಯಕ್ರಮಗಳು, ವ್ಯಕ್ತಿತ್ವ ವಿಕಸನ ತರಬೇತಿ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.