ಕನ್ನಡಪ್ರಭವಾರ್ತೆ ಚಾಮರಾಜನಗರ
ನಾಯಕ ಸಮುದಾಯದ ವಿದ್ಯಾರ್ಥಿಗಳು ಉನ್ನತ, ತಾಂತ್ರಿಕ ಶಿಕ್ಷಣ ವ್ಯಾಸಂಗ ಮಾಡಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು.ನಗರದ ಶ್ರೀಮಹರ್ಷಿ ವಾಲ್ಮೀಕಿ ಭವನದಲ್ಲಿ ತಾಲೂಕು ನಾಯಕ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ, ನಾಯಕ ನೌಕರರ ಸ್ನೇಹ ಬಳಗ ಹಾಗೂ ಮಹರ್ಷಿ ಶ್ರೀ ವಾಲ್ಮೀಕಿ ನೌಕರರ ಸೌಹಾರ್ದ ಸಹಕಾರ ನಿಯಮಿತ ಸಹಯೋಗದಲ್ಲಿ ನಡೆದ ಸಂಘದ 13ನೇ ವಾರ್ಷಿಕೋತ್ಸವ, ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.
ನಾಯಕ ಜನಾಂಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶವಿದೆ. ಸಮುದಾಯದ ಮಕ್ಕಳು ಎಸ್ಎಸ್ಎಲ್ಸಿ, ಪಿಯುಸಿಗೆ ಶಿಕ್ಷಣವನ್ನು ಮೊಟಕುಗೊಳಿಸದೇ ಉನ್ನತ ಶಿಕ್ಷಣ ವ್ಯಾಸಂಗಮಾಡಿ ಮುಂದಿನ ಜೀವನವನ್ನು ಉಜ್ವಲಗೊಳಿಸಿಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಜನಾಂಗದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಜನಾಂಗದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.ನಾಯಕ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘವು 13 ವರ್ಷದಿಂದ ನಿರಂತರವಾಗಿ ಜನಾಂಗದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಪ್ರೋತ್ಸಾಹಿಸುತ್ತಿರವುದು ಬಹಳ ಅರ್ಥಪೂರ್ಣವಾದದ್ದು ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.
ಭಾರತದಲ್ಲಿ ಶಿಕ್ಷಣ ವ್ಯವಸ್ಥೆ ಶತಮಾನಗಳಿಂದಲ್ಲೂ ಕೂಡ ನಡೆದುಕೊಂಡು ಬಂದಿದೆ. ನಮ್ಮ ಸಮಾಜದ ಮೂಲಪುರುಷ ಶ್ರೀ ಮಹರ್ಷಿ ವಾಲ್ಮೀಕಿ ಅವರು ಪುಸ್ತಕಗಳನ್ನು ಓದಿದಾಗ ಅವರು ಆಶ್ರಮ ಶಾಲೆ ತೆರೆದು ಶಿಕ್ಷಣ ಕೊಡುವ ಕೆಲಸವನ್ನು ಮಾಡಿದ್ದಾರೆ ಎಂಬುವುದನ್ನು ಕಾಣಬಹುದು ಎಂದು ಹೇಳಿದರು.
ಕೋಚಿಂಗ್ ಸೆಂಟರ್ ತೆರೆಯಿರಿ:
ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಸಮುದಾಯ ಹಾಗೂ ನೌಕರರು ಜೊತೆಗೂಡಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಪಡೆಯಬೇಕು. ಆ ನಿಟ್ಟಿನಲ್ಲಿ ನೌಕರರ ಸಂಘವು ಮುಂದಿನ ವರ್ಷಗಳಲ್ಲಿ ಕೋಚಿಂಗ್ ಸೆಂಟರ್ ಆರಂಭಿಸಿ ಸಮುದಾಯದ ವಿದ್ಯಾರ್ಥಿಗಳ ನೀಟ್, ಸಿಇಟಿ, ಜೆಇಇ, ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ ಮಾಡಿಕೊಡಬೇಕು. ನಾನು ಕೂಡ ವೈಯಕ್ತಿಕ ವಾಗಿ 25 ಸಾವಿರ ಕೊಡುತ್ತೇನೆ. ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.ನಾಯಕ ಸಮುದಾಯದ ಮುಖಂಡ ಪು.ಶ್ರೀನಿವಾಸನಾಯಕ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಾಯಕ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಸಂವಿಧಾನದ ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯವಾಗಿದೆ. ಹಾಗಾಗಿ ಸಮುದಾಯ ಸಂಘಟಿತರಾಗಬೇಕು. ಇಂದು ಪ್ರತಿಭಾ ಪುರಸ್ಕಾರ ಪಡೆದಿರುವ ವಿದ್ಯಾರ್ಥಿಗಳ ಜೀವನ ಯಶಸ್ವಿಯಾಗಲಿ, ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರ ಸುಧಾರಣೆಯಾದಾಗ ಮಾತ್ರ ದೇಶ ಮುಂದೆ ಹೋಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ.ಶಿವಕುಮಾರ್ ಮಾತನಾಡಿ, ಪ್ರತಿವರ್ಷದಂತೆ ಈ ಬಾರಿಯೂ ಸಮುದಾಯದ .75ಕ್ಕಿಂತ ಹೆಚ್ಚು ಅಂಕ ಪಡೆದ ಪತಿಭಾವಂತ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಪ್ರೋತ್ಸಾಹಿಸಲಾಗಿದೆ. ನಿವೃತ್ತ ನೌಕರರನ್ನು ಸನ್ಮಾನಿಸಿ ಗೌರವಿಸಲಾಯಿತು ಎಂದರು.ಶಿಕ್ಷಕ ಮಹೇಶ್ ಪ್ರಾಸ್ತಾವಿಕ ಭಾಷಣ ಮಾಡಿದರು. ನಿವೃತ್ತ ಶಿಕ್ಷಕ ಕೆಂಪನಪುರ ಸಿದ್ದರಾಜು ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾತನಾಡಿದರು.
ನಗರಸಭಾ ಮಾಜಿ ಅಧ್ಯಕ್ಷ ಸುರೇಶ್, ಜಿ.ಪಂ.ಮಾಜಿ ಸದಸ್ಯರಾದ ಎಸ್. ಸೋಮನಾಯಕ, ರಮೇಶ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಆರ್. ಸುಂದರ್ , ಮೈಸೂರು ಜಿಲ್ಲಾ ಎಸ್ಟಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್, ಪ್ರೊ. ದೇವೇಂದ್ರ ಕುಮಾರ್, ಶಿಕ್ಷಕ ಲಿಂಗರಾಜು, ರೇವಣ್ಣ, ರಾಮಮೂರ್ತಿ, ಎಂ.ಶಿವಕುಮಾರ್, ಆರ್. ಮಹದೇಶ, ಬಿ. ಶಿವರಾಮು ಆರ್.ಚಂದ್ರು, ಜಿ. ರಾಜೇಶ್ ಎಚ್. ಕರಿಯಪ್ಪ , ಎಸ್.ಎಂ.ಮಹೇಶ್ , ಕೆ.ಆರ್. ನಾಗರಾಜು, ಕೃಷ್ಣನಾಯಕ, ಜಗದೀಶ್, ಜಿ. ಶಿವಕುಮಾರ್ ಇತರರು ಹಾಜರಿದ್ದರು.