ಹಾವೇರಿ: ತೋಟಗಾರಿಕಾ ಕಾಲೇಜಿನ ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳು, ಸ್ಟಾರ್ಟ್ಅಪ್‌ಗಳು ಮತ್ತು ತಂತ್ರಜ್ಞಾನ ಅಭಿವೃದ್ಧಿ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು. ದೇವಿಹೊಸೂರಿನಲ್ಲಿರುವ ದಾನವೀರ ಸಿರಸಂಗಿ ಶ್ರೀ ಲಿಂಗರಾಜ ದೇಸಾಯಿ ತೋಟಗಾರಿಕಾ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ 10ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇವಿಹೊಸೂರಿನ ತೋಟಗಾರಿಕಾ ಮಹಾವಿದ್ಯಾಲಯವು ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದೆ. ಆಹಾರ ತಂತ್ರಜ್ಞಾನ ಪದವಿ ಪಡೆದ ವಿದ್ಯಾರ್ಥಿಗಳಿಗೆ ಆಹಾರ ಸಂಸ್ಕರಣಾ ವಿಭಾಗದಲ್ಲಿ ವಿಶ್ವ ಮಟ್ಟದ ಅವಕಾಶಗಳಿವೆ. ರಾಷ್ಟ್ರೀಯ ಮಟ್ಟದಲ್ಲಿ ಆಹಾರ ಸಂಸ್ಕರಣಾ ಕ್ಷೇತ್ರವು ತ್ವರಿತವಾಗಿ ಅಭಿವೃದ್ಧಿಯಾಗುತ್ತಿದ್ದು, ಇದರಿಂದ ಕೃಷಿ ಹಾಗೂ ಭಾರತದ ಆರ್ಥಿಕತೆ ಕೂಡ ಹೆಚ್ಚು ಬೆಳೆಯುತ್ತಿದೆ. ವಿದ್ಯಾರ್ಥಿಗಳು ಪದವಿ ಪಡೆದು ಉತ್ತಮ ಸಾಧನೆಗೈಯಬೇಕು ಎಂದು ತಿಳಿಸಿದರು.ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ಎಚ್. ಜಂಗಮಶೆಟ್ಟಿ ಮಾತನಾಡಿ, ಕೃಷಿ ಎಂಜಿನಿಯರಿಂಗ್ ಹಾಗೂ ಆಹಾರ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೊಸ ಆವಿಷ್ಕಾರಗಳ ಅಗತ್ಯವಿದೆ. ಸಂಶೋಧನೆ ಮತ್ತು ಅಭಿವೃದ್ಧಿ ಮೂಲಕ ಕೃಷಿ ಹಾಗೂ ಆಹಾರ ಸಂಸ್ಕರಣಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಬೇಕು ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಡೀನ್ ಡಾ. ಲಕ್ಷ್ಮಣ ಕೂಕನೂರ ಮಾತನಾಡಿ, ಪ್ರಚಲಿತ ಸವಾಲುಗಳನ್ನು ಎದುರಿಸಿ ವಿದ್ಯಾರ್ಥಿಗಳು ಆಹಾರ ತಂತ್ರಜ್ಞಾನದಲ್ಲಿರುವ ಕಠಿಣ ಪರಿಶ್ರಮದೊಂದಿಗೆ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕಿ ಡಾ. ಶೋಭಾ ಎಸ್. ವಾರ್ಷಿಕ ವರದಿಯನ್ನು ಮಂಡಿಸಿದರು. ಸಹಾಯಕ ಪ್ರಾಧ್ಯಾಪಕಿ ಅನ್ನಪೂರ್ಣಾ ನೀರಲಗಿ ವಸತಿನಿಲಯಗಳ ವರದಿ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ, ಕ್ರೀಡಾ ಹಾಗೂ ವಸತಿನಿಲಯಗಳ ಸೌಲಭ್ಯ, ಸಾಂಸ್ಕೃತಿಕ ಸಾಧನೆಗಳ ಕುರಿತು ವಿವರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಗಣ್ಯರು ವಿತರಿಸಿದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ನೃತ್ಯ, ಸಂಗೀತ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.ಸಹ ಪ್ರಾಧ್ಯಾಪಕಿ ಡಾ. ವೀಣಾ ಎನ್. ಸ್ವಾಗತಿಸಿದರು. ಡಾ. ಶ್ರೀನಿವಾಸ ಜಿ. ವಂದನಾರ್ಪಣೆ ಮಾಡಿದರು.