ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ವಿದ್ಯಾರ್ಥಿಗಳು ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣಕ್ಕಾಗಿ ಜಿಲ್ಲಾ ಕೇಂದ್ರ ಮತ್ತು ಸುತ್ತಮುತ್ತಲಿನ ಶಿಕ್ಷಣ ಸಂಸ್ಥೆಗಳಿಗೆ ಬರುತ್ತಾರೆ

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ

ಜಿಲ್ಲೆಯಲ್ಲಿ ಸಮರ್ಪಕ ಬಸ್ ಸೌಕರ್ಯ ಇಲ್ಲದೆ ವಿದ್ಯಾರ್ಥಿಗಳು ಪಡಿಪಾಟಲು ಪಡುವಂತಾಗಿದ್ದು ಜಿಲ್ಲಾಡಳಿತ ಕೂಡಲೇ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ಮಾರ್ಗಗಳಲ್ಲಿ ಗರಿಷ್ಠ (ಪೀಕ್) ಸಮಯದಲ್ಲಿ ಹೆಚ್ಚುವರಿ ಬಸ್‌ಗಳನ್ನು ಓಡಿಸುವ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಬಸ್ ಸಂಚಾರ ತಡೆದು ಮಾನವ ಸರಪಳಿ ನಿರ್ಮಿಸಿ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ವಿದ್ಯಾರ್ಥಿಗಳು ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣಕ್ಕಾಗಿ ಜಿಲ್ಲಾ ಕೇಂದ್ರ ಮತ್ತು ಸುತ್ತಮುತ್ತಲಿನ ಶಿಕ್ಷಣ ಸಂಸ್ಥೆಗಳಿಗೆ ಬರುತ್ತಾರೆ. ವಿಶೇಷವಾಗಿ ಚಿಂತಾಮಣಿ,ಶಿಡ್ಲಘಟ್ಟ, ಗೌರಿಬಿದನೂರು ಗುಡಿಬಂಡೆ, ಬಾಗೇಪಲ್ಲಿ,ನಂದಿ, ನೆರೆಯ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ವಿಜಯಪುರ ಸೇರಿದಂತೆ ಎಲ್ಲೆಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಬರುತ್ತಾರೆ. ಅರೂರು ಬಳಿಯ ಸರ್ಕಾರಿ ನಂದಿ ಮೆಡಿಕಲ್ ಕಾಲೇಜಿಗೆ ತೆರಳುವ ಮೆಡಿಕಲ್, ನರ್ಸಿಂಗ್ ಮತ್ತು ಅಲೈಡ್ ಸೈನ್ಸ್ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರದಿಂದ ತೆರಳಲು ಮತ್ತು ಮೆಡಿಕಲ್ ಕಾಲೇಜು ಬಳಿಯಿಂದ ಚಿಕ್ಕಬಳ್ಳಾಪುರಕ್ಕೆ ಬರಲು ಸಹ ಬಸ್ಸುಗಳ ಕೊರತೆ ಕಾಣುತ್ತಿದೆ. ಸಕಾಲಕ್ಕೆ ಬಸ್‌ಗಳು ಬಾರದೆ ನಿಗದಿತ ಸಮಯಕ್ಕೆ ಶಾಲಾ, ಕಾಲೇಜುಗಳಿಗೆ ಹೋಗಲು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ಕೆಎಸ್‌ಆರ್‌ಟಿಸಿ ವಿಭಾಗದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆ ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ಮೊನಿಷ್‌ಗೌಡ ಮಾತನಾಡಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳಗಿನ 8 ರಿಂದ 10 ಗಂಟೆಯ ಪೀಕ್ ಅವಧಿಯಲ್ಲಿ ಮತ್ತು ಸಂಜೆ ಸಮಯ 4 ರಿಂದ 6ಗಂಟೆ ಅವಧಿಯಲ್ಲಿ ಬಸ್‌ಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಸಂಕಷ್ಟಕ್ಕೆ ಒಳಗಾಗುತ್ತಾರೆ. ಪಾಸ್ ಇದ್ದರೂ ಖಾಸಗಿ ಬಸ್‌ಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇದೆ ಎಂದು ದೂರಿದರು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ವಿದ್ಯಾರ್ಥಿಗಳು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಎಬಿವಿಪಿ ರಾಜ್ಯ ಕಾರ್ಯದರ್ಶಿ ತೋಟಿರಂಗಸ್ವಾಮಿ, ವಿಭಾಗಿಯ ಸಂಚಾಲಕ ಮನೋಜ್, ಜಿಲ್ಲಾ ಸಂಚಾಲಕ ಮೋನಿಷ್,ವಿನಾಯಕ್, ಬಾಹುಬಲಿ ಮತ್ತಿತರರು ಇದ್ದರು.