. ಗುಬ್ಬಚ್ಚಿಗಳ ರಕ್ಷಣೆ ಮತ್ತು ಅವುಗಳ ಸಂತತಿ ಅಭಿವೃದ್ಧಿಗಾಗಿ ವಿದ್ಯಾರ್ಥಿ ಸಮುದಾಯವು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಆರ್ಡರ್ ಸಂಸ್ಥೆಯ ಯೋಜನಾ ನಿರ್ದೇಶಕರಾದ ಜಿ.ವಿ. ರಘು ಕರೆ ನೀಡಿದರು.
ಕನ್ನಡಪ್ರಭ ವಾರ್ತೆ, ತುಮಕೂರುನಗರ ಮತ್ತು ಗ್ರಾಮೀಣ ಪರಿಸರದಲ್ಲಿ ಗುಬ್ಬಚ್ಚಿಗಳ ಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದ್ದು, ಪರಿಸರದ ಸಮತೋಲನವನ್ನು ಕಾಪಾಡುವಲ್ಲಿ ಇವುಗಳ ಪಾತ್ರ ಅತ್ಯಂತ ದೊಡ್ಡದಿದೆ. ಗುಬ್ಬಚ್ಚಿಗಳ ರಕ್ಷಣೆ ಮತ್ತು ಅವುಗಳ ಸಂತತಿ ಅಭಿವೃದ್ಧಿಗಾಗಿ ವಿದ್ಯಾರ್ಥಿ ಸಮುದಾಯವು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಆರ್ಡರ್ ಸಂಸ್ಥೆಯ ಯೋಜನಾ ನಿರ್ದೇಶಕರಾದ ಜಿ.ವಿ. ರಘು ಕರೆ ನೀಡಿದರು.ತುಮಕೂರು ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಪುಣೆಯ ಸುಜಲಾನ್ ಫೌಂಡೇಶನ್ ಮತ್ತು ತುಮಕೂರಿನ ಆರ್ಡರ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಗುಬ್ಬಚ್ಚಿಗಳ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆಧುನಿಕ ನಗರೀಕರಣ, ಕೈಗಾರಿಕೀಕರಣ ಮತ್ತು ವಾಣಿಜ್ಯ ಕೃಷಿ ಪದ್ಧತಿಯಿಂದಾಗಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಇದರಿಂದಾಗಿ ಮನುಷ್ಯನ ಸಹಚರನಂತೆ ಬದುಕುತ್ತಿದ್ದ ಗುಬ್ಬಚ್ಚಿಗಳು ಇಂದು ಅಳಿವಿನ ಅಂಚಿಗೆ ತಲುಪಿವೆ. ಈ ಪುಟ್ಟ ಜೀವಿಗಳನ್ನು ಉಳಿಸಿಕೊಳ್ಳಲು ನಮ್ಮ ಮನೆಯ ಸುತ್ತ ಉತ್ತಮ ಪರಿಸರವನ್ನು ಕಾಯ್ದುಕೊಳ್ಳುವುದು, ಕೃತಕ ಗೂಡುಗಳನ್ನು ಅಳವಡಿಸುವುದು ಹಾಗೂ ಅವುಗಳಿಗೆ ಆಹಾರ ಮತ್ತು ನೀರನ್ನು ಒದಗಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ತಿಳಿಸಿದರು.ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ.ಕೆ.ಜಿ. ಪರಶುರಾಮ ಇವು ಕೃಷಿ ಕ್ಷೇತ್ರದಲ್ಲಿ ರೈತರಿಗೆ ಮಿತ್ರನಂತೆ ಕೆಲಸ ಮಾಡುತ್ತವೆ. ಇವುಗಳ ಸಂರಕ್ಷಣೆಗೆ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದರು. ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ ಹಾಗೂ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.