ಸಾರಾಂಶ
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕ ಎಂ. ಎಂ. ಯಶ್ವಂತ್ ಕುಮಾರ್ ಹೇಳಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಮೌಲ್ಯಯುತ ಶಿಕ್ಷಣ ಪ್ರತಿಭೆಯ ಅನಾವರಣ ಎಂಬ ನಮ್ಮ ಶಾಲೆಯ ಧ್ಯೇಯ ವಾಕ್ಯದಂತೆ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕ ಎಂ.ಎಂ.ಯಶ್ವಂತ್ ಕುಮಾರ್ ಹೇಳಿದರು.ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಯೋಜಿಸಲಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ ಹಾಗೂ ಶಾರದಾ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಶಾಲಾ ಜೀವನದಲ್ಲಿ ಹತ್ತನೇ ತರಗತಿ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಿ ಶಾಲೆಗೆ ಉತ್ತಮ ಫಲಿತಾಂಶ ತರಬೇಕೆಂದು ಹೇಳಿದರು.ಇದೇ ಸಂದರ್ಭ ಶಾಲೆಯ ಕಳೆದ ಸಾಲಿನ ಪ್ರತಿಭಾವಂತ ವಿದ್ಯಾರ್ಥಿನಿ ಝಿಯಾ ಫಾತಿಮಾಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಅಕ್ಷರ ದಾಸೋಹ ಮುಖ್ಯ ಅಡುಗೆ ಸಿಬ್ಬಂದಿ ಕಮಲಮ್ಮ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಇಕೋ ಕ್ಲಬ್ ವತಿಯಿಂದ ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಶೇಕಡ ನೂರು ಹಾಜರಾತಿ ಪಡೆದ ವಿದ್ಯಾರ್ಥಿನಿಗೆ ಪ್ರೋತ್ಸಾಹದಾಯಕವಾಗಿ ಬಹುಮಾನ ನೀಡಲಾಯಿತು.
ಇದೇ ಸಂದರ್ಭ ಹತ್ತನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಕೊಡುಗೆಯನ್ನು ನೀಡಿದರು.