ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಕಾರ್ಯಕ್ರಮದ ಮೂಲಕ ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವುದರೊಂದಿಗೆ ಅಸ್ಪೃಶ್ಯತೆ ಆಚರಣೆ, ಸಮಾಜದಲ್ಲಿರುವ ಮೇಲು-ಕೀಳೆಂಬ ತಾರತಮ್ಯವನ್ನು ಹೊಡೆದೋಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವೆಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಮೂಢನಂಬಿಕೆಗಳನ್ನು ಅನುಸರಿಸದೇ ಅಂಬೇಡ್ಕರ್, ಬಸವಣ್ಣ, ಬುದ್ದನಂತಹ ಮಹನೀಯರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಮನು ಚಕ್ರವರ್ತಿ ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳ್ಳಾವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಶನಿವಾರ ಬೆಳ್ಳಾವಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ಕಂಡು ಬರುವ ವರ್ಣಭೇದ, ಜಾತಿಭೇದ, ಬಡವ ಬಲ್ಲಿದನೆಂಬ ತಾರತಮ್ಯಗಳನ್ನು ಮೆಟ್ಟಿನಿಂತು ವಿಚಾರಶೀಲರಾಗಿ ಬೆಳೆದು ಸಮಾಜಕ್ಕೆ ದೊಡ್ಡ ಆಸ್ತಿಯಾಗಬೇಕೆಂದು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮಾತನಾಡಿ. ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ ಹಾಗೂ ಚಿಂತನೆಗಳು ಸದಾಕಾಲ ಮನುಕುಲದ ಏಳಿಗೆಗೆ ಅತ್ಯಾವಶ್ಯಕವಾಗಿವೆ. ಇವರ ಚಿಂತನೆ ಮತ್ತು ದೂರದೃಷ್ಟಿ ಮಾರ್ಗದರ್ಶನ ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹೆಚ್ಚು ಪ್ರಸ್ತುತವಾಗುತ್ತಿದೆ. ಪ್ರಬುದ್ಧರಾಗಿ ಬೆಳೆಯುತ್ತಿರುವ ವಿದ್ಯಾರ್ಥಿಗಳು ವಿಚಾರವಂತರಾಗಬೇಕು. ಕೆಟ್ಟದ್ದನ್ನು ಪ್ರಶ್ನಿಸುವ ಹಾಗೂ ಖಂಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಫತೇ ಅಹಮದ್ ಎಂ. ಮಾತನಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಕಾರ್ಯಕ್ರಮದ ಮೂಲಕ ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವುದರೊಂದಿಗೆ ಅಸ್ಪೃಶ್ಯತೆ ಆಚರಣೆ, ಸಮಾಜದಲ್ಲಿರುವ ಮೇಲು-ಕೀಳೆಂಬ ತಾರತಮ್ಯವನ್ನು ಹೊಡೆದೋಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ೫ ವಿದ್ಯಾರ್ಥಿಗಳಿಗೆ ಪುಸ್ತಕ ರೂಪದಲ್ಲಿ ಬಹುಮಾನ ನೀಡಲಾಯಿತು.