ಸಾರಾಂಶ
ಕನ್ನಡಪ್ರಭ ವಾರ್ತೆ ಹಿರಿಯೂರು
ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿಪ್ರಾಯಪಟ್ಟರು.ತಾಲೂಕಿನ ಹೊಸಯಳನಾಡು ಗ್ರಾಮದಲ್ಲಿ ಬಾಲಕರ ವಿದ್ಯಾರ್ಥಿ ನಿಲಯದ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಹಾಗೂ ಹೊಸದಾಗಿ ಮಂಜೂರಾಗಿರುವ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸಿ ಮಾತನಾಡಿದರು.ತಾಲೂಕಿನಲ್ಲಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ, ಹಾಸ್ಟೆಲ್ಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಸರ್ಕಾರಿ ಹಾಸ್ಟೆಲ್ಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಹಾಸ್ಟೆಲ್ ವ್ಯವಸ್ಥೆ ವಿದ್ಯಾರ್ಥಿ ಬದುಕಲ್ಲಿ ಬಹುದೊಡ್ಡ ಆಸರೆಯಾಗುವುದರಿಂದ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹಾಸ್ಟೆಲ್, ಶಾಲಾ ಕಾಲೇಜು, ಶಿಕ್ಷಕರು ಹಾಗೂ ಪೋಷಕರ ಹೆಸರು ಉಳಿಸಬೇಕು ಎಂದು ಹೇಳಿದರು.
ಶಾಲೆಯ ಮಹಾಪೋಷಕ ನಾ.ತಿಪ್ಪೇಸ್ವಾಮಿ ಮಾತನಾಡಿ, ಕಳೆದ ಹದಿನೈದು ವರ್ಷಗಳಿಂದ ಸುಮಾರು 15 ಕೋಟಿ ರು. ಖರ್ಚು ಮಾಡಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರು ಹಾಗೂ ಬಡವರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಾಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುಲಾಗಿದೆ ಎಂದರು.ಈ ಶಾಲೆಯನ್ನು ಬೇರೆ ಶಾಲೆಗೆ ಹೋಲಿಕೆ ಮಾಡಬಾರದು. ಕಾರ್ಪೊರೇಟ್ ಶಾಲೆಗಳಲ್ಲಿ ಸಿಗುವಂತಹ ಎಲ್ಲಾ ಸೌಲಭ್ಯಗಳು ಈ ಶಾಲೆಯಲ್ಲಿ ಸಿಗುವಂತೆ ಮಾಡಲಾಗಿದೆ. ಉತ್ತಮವಾದ ವಾತಾವರಣ, ಗಾಳಿ, ಬೆಳಕು, ಪರಿಸರವಿರುವ ಒಂದು ಹೈಟೆಕ್ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ಪ್ರಯತ್ನವಾಗಿದೆ. ನುರಿತ ಶಿಕ್ಷಕರ ಭೋಧನೆ ಒಳಗೊಂಡಂತೆ ಅತ್ಯಾಧುನಿಕ ಉತ್ತಮ ಆಟದ ಮೈದಾನ, ಗ್ರಂಥಾಲಯ, ಕಂಪ್ಯೂಟರ್, ಪ್ರಯೋಗಾಲಯ ಸೇರಿದಂತೆ ವಿವಿಧ ಕಲಿಕಾ ಸೌಲಭ್ಯಗಳು ದೊರೆಯುತ್ತಿವೆ. ಕಲಿಕೆಯ ಜತೆಗೆ ಒಂದೊಳ್ಳೆ ಆರೋಗ್ಯ ಸಿಗಬೇಕು ಎಂಬ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಕೆಪಿಎಸ್ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ತಿಮ್ಮಶೆಟ್ರು, ಪ್ರಾಂಶುಪಾಲ, ರಂಗಸ್ವಾಮಿ, ಕೆಪಿಎಸ್ ಮುಖ್ಯ ಶಿಕ್ಷಕ ಈರಣ್ಣ, ಪ್ರೌಢಶಾಲಾ ಶಿಕ್ಷಕ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರಲಿಂಗೇಗೌಡ, ಖಾದಿ ರಮೇಶ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಕೃಷ್ಣಮೂರ್ತಿ, ಕಂದಿಕೆರೆ ಸುರೇಶ್ ಬಾಬು, ಕಾರ್ಮಿಕ ಪರಿಷತ್ ಅಧ್ಯಕ್ಷ ಪರಮೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ್, ತಿಪ್ಪೇಸ್ವಾಮಿ ಹಾಗೂ ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು ಹಾಜರಿದ್ದರು.