ವಿದ್ಯಾರ್ಥಿಗಳು ಸರ್ಕಾರದ ಯೋಜನೆ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು: ಡಿ.ರವಿಶಂಕರ್

| Published : Nov 06 2024, 12:46 AM IST / Updated: Nov 06 2024, 12:47 AM IST

ವಿದ್ಯಾರ್ಥಿಗಳು ಸರ್ಕಾರದ ಯೋಜನೆ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು: ಡಿ.ರವಿಶಂಕರ್
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳಲ್ಲಿ ಅಡಗಿರುವ ಅಸಾಧಾರಣ ಪ್ರತಿಭೆಯನ್ನು ಅನಾವರಣ ಮಾಡಿ ಅದಕ್ಕೆ ಪೋಷಣೆ ನೀಡಿ ಅವರು ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೂ ಸ್ಪರ್ಧಿಸಿ ಉತ್ತಮ ಸಾಧನೆ ಮಾಡಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದ್ದು, ಸೋಲು ಗೆಲುವನ್ನು ಲೆಕ್ಕಿಸದೆ ಭಾಗವಹಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಶೈಕ್ಷಣಿಕ ಪ್ರಗತಿಗೆ ರಾಜ್ಯ ಸರ್ಕಾರ ಹೆಚ್ಚು ಆದ್ಯತೆ ನೀಡಿ ಹತ್ತು ಹಲವು ಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ತಾಲೂಕಿನ ಕಾಳೇನಹಳ್ಳಿ ಆದರ್ಶ ಶಾಲೆಯಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ, ಇದರೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಅಡಗಿರುವ ಅಸಾಧಾರಣ ಪ್ರತಿಭೆಯನ್ನು ಅನಾವರಣ ಮಾಡಿ ಅದಕ್ಕೆ ಪೋಷಣೆ ನೀಡಿ ಅವರು ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೂ ಸ್ಪರ್ಧಿಸಿ ಉತ್ತಮ ಸಾಧನೆ ಮಾಡಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದ್ದು, ಸೋಲು ಗೆಲುವನ್ನು ಲೆಕ್ಕಿಸದೆ ಭಾಗವಹಿಸಬೇಕು ಎಂದರು.

ಸಾಲಿಗ್ರಾಮ ಮತ್ತು ಕೆ.ಆರ್. ನಗರ ತಾಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡಿದ್ದು, ಇದು ಇತರರಿಗೆ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಸದಾ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.

ಕ್ಷೇತ್ರದ ವ್ಯಾಪ್ತಿಯ ಎಲ್ಲ ಶಾಲೆಗಳ ದುರಸ್ತಿಗೆ ಮೂರು ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಿದ್ದು, ಇದರ ಜತೆಗೆ ಆದರ್ಶ ಶಾಲೆಯ ಒಳಾವರಣ ಸಮತಟ್ಟು ಕೆಲಸಕ್ಕೂ ಹಣ ನೀಡಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯವಿರುವ ಎಲ್ಲ ಶಾಲೆಗಳ ದುರಸ್ತಿಯ ತುರ್ತು ಕೆಲಸವನ್ನು ಆದ್ಯತೆಯ ಮೇರೆಗೆ ನಿರ್ವಹಿಸಿ ನನಗೆ ವರದಿ ನೀಡಬೇಕು ಎಂದು ತಾಕೀತು ಮಾಡಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ಕ್ಷೇತ್ರದ ಎಸ್ಸೆಸ್ಸೆಲ್ಸಿ ಫಲಿತಾಂಶವು ನಾಲ್ಕನೇ ಸ್ಥಾನಗಳಿಸಿದ್ದು, ಈ ಬಾರಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನಕ್ಕೇರಲು ಈಗಿನಿಂದಲೇ ಪೂರ್ವ ತಯಾರಿ ಕೈಗೊಂಡು ಪ್ರೌಢಶಾಲಾ ಶಿಕ್ಷಕರಿಗೆ ಅಗತ್ಯ ತರಬೇತಿ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಆದೇಶಿಸಿದರು. ಈ ವಿಚಾರದಲ್ಲಿ ನಾನು ಎಲ್ಲ ರೀತಿಯ ಸಲಹೆ ಮತ್ತು ಸಹಕಾರ ನೀಡಿ ಶಿಕ್ಷಕರ ಬೆನ್ನೆಲುಬಾಗಿ ನಿಲ್ಲುತ್ತೇನೆಂದು ಭರವಸೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಕೃಷ್ಣಪ್ಪ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೆ.ಪಿ. ಜಗದೀಶ್, ಮುಖ್ಯ ಶಿಕ್ಷಕಿ ರುಕ್ಮಿಣಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ವೇಷ ಭೂಷಣ ಮತ್ತು ಇತರ ಕ್ರಿಯಾತ್ಮಕ ಚಟುವಟಿಕೆಗಳು ಎಲ್ಲರಿಂದಲೂ ಗಮನ ಸೆಳೆಯಿತು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೆ.ಪಿ. ಜಗದೀಶ್, ಉಪಾಧ್ಯಕ್ಷೆ ಶೈಲಜಾ ಮಧುಚಂದ್ರ, ಸದಸ್ಯರಾದ ಡಿ.ಸಿ. ರವಿ, ಚಂದ್ರು, ಕವಿತಾ ಧನಂಜಯ, ಶಿಲ್ಪಾಧರ್ಮ, ಕಲಾವತಿ, ಮಂಜುನಾಥ್, ಸಣ್ಣಪ್ಪ, ಮುಖ್ಯಶಿಕ್ಷಕಿ ರುಕ್ಮಿಣಿ, ಬಿಆರ್‌.ಸಿ ವೆಂಕಟೇಶ್, ಸಿಆರ್‌.ಪಿ ಉದಯಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ. ನಟರಾಜು, ಸಿಡಿಪಿಒ ಸಿ.ಎಂ. ಅಣ್ಣಯ್ಯ, ಅಕ್ಷರ ದಾಸೋಹ ಅಧಿಕಾರಿ ಸ್ವಾಮಿಗೌಡ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಬಿ.ಎಲ್. ಮಹದೇವ್, ಶಂಕರೇಗೌಡ, ಸಿ.ಈ. ಉಮೇಶ್, ಪೂರ್ಣಿಮ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ, ಉಪಾಧ್ಯಕ್ಷ ಕೃಷ್ಣನಾಯಕ, ದೈಹಿಕ ಶಿಕ್ಷಣಾಧಿಕಾರಿ ಎಂ.ಪಿ. ಕುಮಾರಸ್ವಾಮಿ, ಶಿಕ್ಷಕ ಸೈಯದ್‌ ರಿಜ್ವಾನ್, ಜ್ಯೋತಿಕುಮಾರ್ ಇದ್ದರು.