ಹನೂರು: ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯಲ್ಲಿ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಶಿಸ್ತು, ಸಂಯಮ ಬೆಳೆಸಿಕೊಂಡು ವಿದ್ಯಾವಂತರಾಗಿ ಎಂದು ಶಿಕ್ಷಣಾಧಿಕಾರಿ ಪ್ರತಿಭಾ ಸಲಹೆ ನೀಡಿದರು.

ಶಾಲಾ ಪ್ರಾರಂಭೋತ್ಸವದ ಅಂಗವಾಗಿ ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ವಿಭಾಗವನ್ನು ಉದ್ಘಾಟಿಸಿ, ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಗುಲಾಬಿ ಹೂ ನೀಡಿ ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಶುಭಾಶಯ ಕೋರಿ ಮಾತನಾಡಿದರು. ವಿದ್ಯೆ ಜೊತೆಗೆ ವಿನಯ ಹಾಗೂ ಶಿಸ್ತು, ಸಂಯಮವನ್ನು ಬೆಳೆಸಿಕೊಂಡಾಗ ಮಾತ್ರ ಶಿಕ್ಷಣ ಸಾರ್ಥಕವಾಗುತ್ತದೆ ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಿಗುವ ಸೌಲತ್ತುಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳುವಂತೆ ಹಾಗೂ ವಿದ್ಯಾರ್ಥಿಗಳು ಉನ್ನತ ಆದರ್ಶಗಳನ್ನು ಹೊಂದಿ ಶ್ರದ್ಧೆಯಿಂದ ಅಧ್ಯಯನ ಮಾಡಬೇಕು. ಸ್ವಯಂ ಶ್ರಮ ಮತ್ತು ನಿಯಮಿತ ಅಭ್ಯಾಸವೇ ಯಶಸ್ಸಿನ ಕೀಲಿಕೈ ಎಂದು ಅವರು ತಿಳಿಸಿದರು.

ಬಳಿಕ ಸಿಡಿಒ ಅಂಬಿಕಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭವಾಗುತ್ತಿರುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವಾಗಿದ್ದು, ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಿಆರ್ ಸಿ ವೆಂಕಟೇಶ್ ,ಇಸಿಒ ಅಶೋಕ್ ಮಹೇಶ್ ಹಾಗೂ ಮುಖ್ಯ ಶಿಕ್ಷಕರಾದ ಕೆಂಪರಾಜು, ಪ್ರಭುಸ್ವಾಮಿ, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.