ವಿದ್ಯಾರ್ಥಿಗಳಿಗೆ ವಸತಿನಿಲಯದ ತೊಂದರೆಯಾಗದಿರಲಿ

| Published : Jul 22 2025, 01:15 AM IST

ವಿದ್ಯಾರ್ಥಿಗಳಿಗೆ ವಸತಿನಿಲಯದ ತೊಂದರೆಯಾಗದಿರಲಿ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ಅವರಿಗೆ ಸುಸಜ್ಜಿತ ವಸತಿ ನಿಲಯ ಒದಗಿಸುವುದು

ಕಾರವಾರ: ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ಅವರಿಗೆ ಸುಸಜ್ಜಿತ ವಸತಿ ನಿಲಯ ಒದಗಿಸುವುದು ಸೇರಿದಂತೆ ವಸತಿ ನಿಲಯದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು.

ಅವರು ಸೋಮವಾರ ಶೇಜವಾಡದಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟದ ಉದ್ಘಾಟಿಸಿ ಮಾತನಾಡಿದರು.ಈ ವಿದ್ಯಾರ್ಥಿನಿಲಯದ ಕಟ್ಟಡ ಕಾಮಗಾರಿ ಪೂರ್ಣಗೊಂಡು ವರ್ಷಗಳು ಕಳೆದಿದ್ದರೂ ಕೂಡ ಸೂಕ್ತ ರಸ್ತೆ ಸೌಲಭ್ಯ ಇಲ್ಲದ ಕಾರಣ ಇದು ವಿದ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಾಗಿರಲಿಲ್ಲ. ಈ ಬಗ್ಗೆ ಅರಿತು ವಿಶೇಷ ಮುತುವರ್ಜಿ ವಹಿಸಿ ಶಾಸಕರ ನಿಧಿಯಿಂದ ಈ ಕಟ್ಟಡಕ್ಕೆ ₹40 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಾಂಕ್ರಿಟ್ ರಸ್ತೆ ನಿರ್ಮಿಸಿರುವುದು ಮಾತ್ರವಲ್ಲದೇ ವಿದ್ಯುತ್ ವ್ಯವಸ್ಥೆ ಮತ್ತು ಕಟ್ಟಡಕ್ಕೆ ಸೂಕ್ತ ಗೇಟ್ ಸೌಲಭ್ಯ ಒದಗಿಸಲಾಗಿದೆ ಎಂದರು.

ಇಲ್ಲಿನ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ಯಾವುದೇ ಹೆಚ್ಚಿನ ಸೌಲಭ್ಯದ ಕುರಿತು ಬೇಡಿಕೆ ಸಲ್ಲಿಸಿದ್ದಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಹಿತದೃಷ್ಠಿಯಿಂದ ಅದನ್ನು ಪೂರ್ಣಗೊಳಿಸಲಾಗುವುದು. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡುವುದರ ಮೂಲಕ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವಂತೆ ಹಿತ ನುಡಿದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ರಾಣೆ, ತಾಪಂ ಕಾರ್ಯ ನಿರ್ವಹಣಾಧಿಕಾರಿ ವೀರನಗೌಡ ಪಾಟೀಲ್, ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಅಧಿಕಾರಿ ಅಶೋಕ ಗದ್ದಿಗೌಡರ ಮತ್ತಿತರರು ಇದ್ದರು.