ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗಿಯಾಗಬೇಕು ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸಲಹೆ ನೀಡಿದರು.

ಪಟ್ಟಣದ ಗುರುಭವನದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ ಯುಐ) ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ 130 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರು ಮಕ್ಕಳನ್ನು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹಿಸಿ ಎಂದರು.

ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದೇನೆ. ನಾನು ಓದಿದ್ದು ಬಿಕಾಂ, ನಾನು ಬಿಸಿನೆಸ್ ಮಾಡಬೇಕಿತ್ತು. ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಶಾಸಕನಾಗಿದ್ದೇನೆ. ವಿದ್ಯಾರ್ಥಿಗಳೂ ನಿರ್ದಿಷ್ಟ ಗುರಿ ಇಟ್ಟು ಕೊಟ್ಟುಕೊಳ್ಳಿ ಎಂದು ಹೇಳಿದರು.

ಪಟ್ಟಣದಲ್ಲಿ ಇತ್ತೀಚೆಗೆ ಎರಡು ದಿನ ಓದಿದ ವಿದ್ಯಾರ್ಥಿ ಹಾಗೂ ಯುವಕರಿಗೆ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿದ್ದು ಇದು ಸಂತಸ ತಂದಿದೆ ಎಂದರು.


ಇತ್ತೀಚೆಗೆ ಟೆಕ್ನಾಲಜಿಗೆ ಹೆಚ್ಚು ಒತ್ತು ಕೊಟ್ಟಷ್ಟು ಉದ್ಯೋಗ ಸಮಸ್ಯೆ ಸೃಷ್ಟಿಯಾಗುತ್ತಿದೆ. ಹೆಚ್ಚು ಓದಿರುವ ವಿದ್ಯಾರ್ಥಿಗಳು ಅರಣ್ಯ ಇಲಾಖೆಯ ಹೊರ ಗುತ್ತಿಗೆ ಕೆಲಸ ಕೇಳುತ್ತಿದ್ದಾರೆ. ಇಲ್ಲಿಗೆ ಬಂದು ನಿಂತಿದೆ ನಿರುದ್ಯೋಗ ಸಮಸ್ಯೆ ಎಂದು ಬೇಸರ ವ್ಯಕ್ತಪಡಿಸಿದರು.

ಎನ್ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಮಾತನಾಡಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದರೂ ವಿದ್ಯಾರ್ಥಿಗಳು ಪ್ರಶ್ನೆ ಮಾಡಲಿಲ್ಲ. ಅನ್ಯಾಯ ಎಲ್ಲಿ ಕಾಣುತ್ತದೆಯೋ ಅಲ್ಲಿ ಎಲ್ಲರೂ ಧ್ವನಿಯಾಗಿ ನ್ಯಾಯದ ಪರ ನಿಲ್ಲಬೇಕು ಎಂದು ಹುರಿದುಂಬಿಸಿದರು.

ದೇಶ ಹಾಗೂ ರಾಜ್ಯದಲ್ಲಿ ಅದೆಷ್ಟೋ ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತವರಿಗೆ ನ್ಯಾಯ ಸಿಕ್ಕಿಲ್ಲ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಾತಾಡಿಲ್ಲ‌. ಕನಿಷ್ಠ ಸಾಂತ್ವನ ಸಹ ಹೇಳಿಲ್ಲ. ಈ ಸಂಬಂಧ ಪ್ರತಿಭಟಿಸುವ ಹೋರಾಟಗಾರರನ್ನು ಅಸ್ಪತ್ರೆಗೆ ಬಲವಂತವಾಗಿ‌ ಸೇರಿಸಿ ಪ್ರತಿಭಟನೆ ದಿಕ್ಕು ತಪ್ಪಿಸಿದ್ದಾರೆ ಎಂದು ಆರೋಪಿಸಿದರು.

ಗುಂಡ್ಲುಪೇಟೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳಿಗೆ ಎನ್‌ಎಸ್‌ಯುಐ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸಮಾರಂಭದಲ್ಲಿ ಕಾಡ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್, ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷ ರಫಿಕ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜೇಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಜಿ.ಮಡಿವಾಳಪ್ಪ, ಎಪಿಎಂಸಿ ಅಧ್ಯಕ್ಷ ಆರ್.ಎಸ್. ನಾಗರಾಜು, ಹಾಪ್ ಕಾಮ್ಸ್ ಅಧ್ಯಕ್ಷ ರಾಘವಾಪುರ ನಾಗೇಶ್, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಟಿಎಪಿಸಿಎಂಎಸ್‌ ಮಾಜಿ ಅಧ್ಯಕ್ಷ ಸೋಮಶೇಖರ್‌, ಯುವ ಮುಖಂಡರಾದ ಮಣಿ ಮಡಹಳ್ಳಿ, ವಿಶ್ವಾಸ ಸೇರಿದಂತೆ ಹಲವರಿದ್ದರು.

-----------

20ಜಿಪಿಟಿ3

ಗುಂಡ್ಲುಪೇಟೆಯಲ್ಲಿ ಎನ್‌ಎಸ್‌ಯುಐ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸನ್ಮಾನಿಸಿದರು.

----------