ಸಾರಾಂಶ
ಆಧುನಿಕ ಜೀವನಶೈಲಿಗೆ ಮಾರುಹೋಗುತ್ತಿರುವ ಯುವಕರು ಮಾದಕ ವಸ್ತುಗಳ ಸೇವನೆ ಜೀವಕ್ಕೆ ಅಪಾಯಕಾರಿ ಎಂದು ತಿಳಿದಿದ್ದರೂ ಸಹ ಇದರ ಚಟಕ್ಕೆ ದಾಸ ರಾಗುತ್ತಿರುವುದು ವಿಷಾದನೀಯ.
ಕನ್ನಡಪ್ರಭ ವಾರ್ತೆ ಮದ್ದೂರು
ಮಾದಕ ವಸ್ತುಗಳ ದುಶ್ಚಟಗಳಿಂದ ವಿದ್ಯಾರ್ಥಿಗಳು ದೂರವಿದ್ದು, ಓದಿನ ಕಡೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಶಿವಕುಮಾರ್ ಗುರುವಾರ ಹೇಳಿದರು.ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಆರ್.ಕೆ.ವಿದ್ಯಾಸಂಸ್ಥೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಮಾದಕ ವಸ್ತುಗಳ ಸೇವನೆ ಮನುಷ್ಯನ ಆರೋಗ್ಯಕ್ಕೆ ಹಾನಿಕರ. ಆದರೂ ಸಹ ಯುವಜನತೆಯ ಮಾದಕ ವಸ್ತುಗಳ ದಾಸರಾಗಿ ತಮ್ಮ ಅಮೂಲ್ಯ ಜೀವಗಳನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ ಎಂದರು.ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಮಾದಕ ವಸ್ತುಗಳ ಸೇವನೆ ಫ್ಯಾಶನ್ ಶೈಲಿಯಲ್ಲಿ ಅನುಕರಣೆ ಮಾಡುತ್ತಿದ್ದಾರೆ. ಭವಿಷ್ಯದಲ್ಲಿ ಬಾಳಿ ಬದುಕಬೇಕಾಗಿದ್ದ ಯುವಕರು ತಮಗೆ ಅರಿವಿಲ್ಲದಂತೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಕುಟುಂಬಗಳನ್ನು ದುಃಖದ ಮಡಿಲಿಗೆ ಈಡು ಮಾಡುತ್ತಿದ್ದಾರೆ ಎಂದು ವಿಷಾದಿಸಿದರು.
ಆರಕ್ಷಕ ಉಪನಿರೀಕ್ಷಕ ಮಂಜುನಾಥ್ ಮಾತನಾಡಿ, ಆಧುನಿಕ ಜೀವನಶೈಲಿಗೆ ಮಾರುಹೋಗುತ್ತಿರುವ ಯುವಕರು ಮಾದಕ ವಸ್ತುಗಳ ಸೇವನೆ ಜೀವಕ್ಕೆ ಅಪಾಯಕಾರಿ ಎಂದು ತಿಳಿದಿದ್ದರೂ ಸಹ ಇದರ ಚಟಕ್ಕೆ ದಾಸ ರಾಗುತ್ತಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.ಮಾದಕ ವಸ್ತುಗಳ ನಿಷೇಧ ಕೇವಲ ಕಾನೂನು ಮತ್ತು ಕಾಯ್ದೆಗಳಿಂದ ಸಾಧ್ಯವಿಲ್ಲ. ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ ಎಂದದು ಹೇಳಿದರು.
ಕಾರ್ಯಕ್ರಮದಲ್ಲಿ ಆರ್. ಕೆ.ವಿದ್ಯಾ ಸಂಸ್ಥೆ ಆಡಳಿತ ಅಧಿಕಾರಿ ಎಂ.ಎಸ್.ಮರಿಸ್ವಾಮಿಗೌಡ, ಪ್ರಾಂಶುಪಾಲ ಪ್ರವೀಣ್, ಮುಖ್ಯ ಶಿಕ್ಷಕರಾದ ಎಂ. ಎನ್.ರಮೇಶ್, ಅನಸೂಯ ಭಾಗವಹಿಸಿದ್ದರು.