ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ

| Published : Jun 27 2024, 01:00 AM IST

ಸಾರಾಂಶ

ಹೊಸಕೋಟೆ: ಶಾಲಾ ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೊಸಕೋಟೆ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಅಶೋಕ್ ತಿಳಿಸಿದರು.

ಹೊಸಕೋಟೆ: ಶಾಲಾ ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೊಸಕೋಟೆ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಅಶೋಕ್ ತಿಳಿಸಿದರು.

ನಗರದ ಮಹದೇವ ಕಾಲೇಜು ಆವರಣದಲ್ಲಿ ಹೊಸಕೋಟೆ ಪೊಲೀಸ್ ಠಾಣೆ ಆಯೋಜಿಸಿದ್ದ ನಿಷೇಧಿತ ಮಾದಕ ವಸ್ತುಗಳ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಸನ್ನಿವೇಶದಲ್ಲಿ ದೇಶದಲ್ಲಿ ಸುಶಿಕ್ಷಿತ ವಿದ್ಯಾವಂತರೆ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಸರ್ಕಾರಕ್ಕೆ ಹಾಗೂ ಪೊಲೀಸ್ ಇಲಾಖೆಗೆ ಮಾದಕ ವಸ್ತುಗಳ ಕಳ್ಳ ಸಾಗಣೆ ತಡೆಯುವುದೇ ದೊಡ್ಡ ಸವಾಲಾಗಿದೆ. ಅದರಿಂದ ಇಂದಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಸಮರ ಸಾರಬೇಕಿದೆ. ಮಾದಕ ವಸ್ತುಗಳ ಬಳಕೆಯಿಂದ ಮನುಷ್ಯನ ಬದುಕು ಅದಃಪಥನದತ್ತ ಸಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು ಇತರರಿಗೂ ಜಾಗೃತಿ ಮೂಡಿಸಬೇಕು ಎಂದರು.

ಪ್ರಾಂಶುಪಾಲ ರಾಮನಾಥ್ ಮಾತನಾಡಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ನಡೆಸಿದ ರಾಷ್ಟ್ರೀಯ ಸಮಗ್ರ ಸಮೀಕ್ಷೆ ಪ್ರಕಾರ ದೇಶದಲ್ಲಿ 60 ದಶ ಲಕ್ಷಕ್ಕೂ ಹೆಚ್ಚು ಮಾದಕ ವ್ಯಸನಿಗಳಿದ್ದಾರೆ. ಅದರಲ್ಲೂ ಪ್ರಮುಖವಾಗಿ 15ರಿಂದ 18 ವಯಸ್ಸಿನವರೇ ಹೆಚ್ಚಾಗಿದೆ ಎಂದು ಅಂಕಿ ಅಂಶಗಳು ಹೇಳುತ್ತವೆ. ಮಾದಕ ವಸ್ತುಗಳ ಪಿಡುಗಿನಿಂದ ಹೆಚ್ಚಿನ ಸಂಖ್ಯೆಯ ಜನರ ಜೀವನ ಹಾಳಾಗಿದೆ. ಇದನ್ನ ಪ್ರತಿಯೊಬ್ಬ ಶಾಲಾ-ಕಾಲೇಜು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.

ಇದೇ ವೇಳೆ ಮಾದಕ ವಸ್ತುಗಳ ವಿರೋಧಿ ದಿನದ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ನಾಟಕ ಪ್ರದರ್ಶಿಸಲಾಯಿತು. ಪುರಸಭೆ ಸದಸ್ಯ ರಾಮಾಂಜನಿ, ಮುಖಂಡರಾದ ಶೌರತ್, ದೊಡ್ಮನೆ ರವಿ ಇತರರಿದ್ದರು.

ಫೋಟೋ 26 ಹೆಚ್‌ಎಸ್‌ಕೆ 1

ಹೊಸಕೋಟೆ ಮಹದೇವ ಕಾಲೇಜು ಆವರಣದಲ್ಲಿ ಹೊಸಕೋಟೆ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ನಿಷೇಧಿತ ಮಾದಕ ವಸ್ತುಗಳ ವ್ಯಸನದ ವಿರುದ್ಧದ ಜಾಗೃತಿ ಕಾರ್ಯಕ್ರಮದಲ್ಲಿ ಆರಕ್ಷಕ ನಿರೀಕ್ಷಕ ಅಶೋಕ್ ಜಾಗೃತಿ ಮೂಡಿಸಿದರು.