ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮುದಾಯದ ಅಭಿವೃದ್ಧಿಗೆ ಬಳಸಲು ಉಪವಿಭಾಗಾಧಿಕಾರಿ ಸೂಚನೆ

| Published : Dec 22 2023, 01:30 AM IST

ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮುದಾಯದ ಅಭಿವೃದ್ಧಿಗೆ ಬಳಸಲು ಉಪವಿಭಾಗಾಧಿಕಾರಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮುದಾಯದ ಅಭಿವೃದ್ಧಿಗೆ ಬಳಸಲು ಉಪವಿಭಾಗಾಧಿಕಾರಿ ಸೂಚನೆಎಸ್ಸಿ, ಎಸ್ಟಿ. ದೌರ್ಜನ್ಯ ನಿಯಂತ್ರಣ , ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ನೇಮಕಾತಿ ನಿಷೇಧ, ಪುನರ್ವಸತಿ ಕುರಿತ ಸಭೆ

-ಎಸ್ಸಿ, ಎಸ್ಟಿ. ದೌರ್ಜನ್ಯ ನಿಯಂತ್ರಣ - ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ನೇಮಕಾತಿ ನಿಷೇಧ, ಪುನರ್ವಸತಿ ಕುರಿತ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಅನುಸೂಚಿತ ಜಾತಿ ಮತ್ತು ಪಂಗಡಗಳಿಗೆ ಮೀಸಲಿಟ್ಟ ಅನುದಾನವನ್ನು ಅದೇ ಸಮುದಾಯದ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ ಎಂದು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಎಚ್‌.ಡಿ. ರಾಜೇಶ್ ಹೇಳಿದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಗುರುವಾರ ಏರ್ಪಡಿಸಲಾಗಿದ್ದ ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕುರಿತು ಚಿಕ್ಕಮಗಳೂರು ಕಂದಾಯ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಂದಾಯ ವ್ಯಾಪ್ತಿಯಲ್ಲಿ ವಾಸಿಸುವ ಸಮುದಾಯದ ಸಮಸ್ಯೆಗಳನ್ನು ಗುರುತಿಸಲಾಗಿದ್ದು ಅವುಗಳಲ್ಲಿ ವಿವಿಧ ಗ್ರಾಮಗಳಿಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳಾದ ವಸತಿ, ರಸ್ತೆ ಮತ್ತು ಸೇತುವೆ ಕಾಮಗಾರಿಗಳನ್ನು ಅಭಿವೃದ್ಧಿಪಡಿಸಲು ಮೇಲಧಿಕಾರಿಗಳ ಮೂಲಕ ಅಂದಾಜು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕೆಲವು ಗ್ರಾಮಗಳಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಈ ಸಮುದಾಯ ಜನರಿಗೆ ವಸತಿ, ಭೂಮಿ ನೀಡಲು ಆಯಾ ತಾಲೂಕು ತಹಸೀಲ್ದಾರ್ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮೂಲಕ ಪಟ್ಟಿ ತಯಾರಿಸಿಕೊಳ್ಳಲಾಗಿದೆ. ಹಂತ ಹಂತವಾಗಿ ಅವರ ಬೇಡಿಕೆಗಳನ್ನು ನಿಯಮಾನುಸಾರ ದೊರಕಿಸಿಕೊಡಲಾಗುವುದು ಎಂದರು.

ಕೆಲವು ಭಾಗದಲ್ಲಿ ಒತ್ತುವರಿ ಅರಣ್ಯ ಸಮಸ್ಯೆಗಳಿದ್ದು ದೌರ್ಜನ್ಯ ಪ್ರಕರಣಗಳಿಗೆ ಶೀಘ್ರವಾಗಿ ನ್ಯಾಯ ಸಿಗುವ ರೀತಿಯಲ್ಲಿ ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ವಕೀಲರ ಮೂಲಕ ನಿಗಾ ವಹಿಸಲಾಗುತ್ತಿದೆ. ದೌರ್ಜನ್ಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಲಕಾಲಕ್ಕೆ ಸಭೆ ಮಾಡಿ ನಿಗಾವಹಿಸಲಾಗುತ್ತಿದ್ದು, ಶಾಲಾ, ಕಾಲೇಜು, ಹಾಸ್ಟೆಲ್ ಸುತ್ತ ಮುತ್ತ ಬಾರ್‌ಗಳನ್ನು ತೆಗೆಯದಿರಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಿರಿಯ ಅಧಿಕಾರಿಗಳ ಮೂಲಕ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಕಂದಾಯ ವಿಭಾಗ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮತ್ತು ಸುರಕ್ಷಾ ಪರಿಕರಗಳನ್ನು ನೀಡಿ ಅವುಗಳನ್ನು ಧರಿಸಿ ಕೆಲಸ ನಿರ್ವಹಿಸುವಂತೆ ನೋಡಿಕೊಳ್ಳಲಾಗಿದ್ದು, ಪರಿಸರ, ನಗರ, ಪಟ್ಟಣಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹಾಗೂ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ಹಲವು ಕ್ರಮಗಳನ್ನು ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಕಾಲಕಾಲಕ್ಕೆ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು ಎಂದರು. ತಹಸೀಲ್ದಾರ್‌ಗಳಾದ ಡಾ. ಸುಮಂತ್, ಬಸವರಾಜ್‌, ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ತಾರಾನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೇವಣ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ದೌರ್ಜನ್ಯ ಸಮಿತಿ ಸದಸ್ಯರಾದ ಡಾ. ಶಿವಪ್ರಸಾದ್, ರವೀಂದ್ರ ಕವಡೆ ಕಟ್ಟಿ ಮತ್ತು ಅಣ್ಣಾದೊರೆ, ಚಂದ್ರಶೇಖರ್ ಸಭೆಯಲ್ಲಿ ಭಾಗವಹಿಸಿದ್ದರು. 21 ಕೆಸಿಕೆಎಂ 3

ಚಿಕ್ಕಮಗಳೂರಿನ ತಾಪಂ ಸಭಾಂಗಣದಲ್ಲಿ ಉಪ ವಿಭಾಗಾಧಿಕಾರಿ ರಾಜೇಶ್‌ ಅಧ್ಯಕ್ಷತೆಯಲ್ಲಿ ಗುರುವಾರ ಎಸ್ಸಿ., ಎಸ್ಟಿ. ದೌರ್ಜನ್ಯ ನಿಯಂತ್ರಣ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಬರ್ಸ್‌ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕುರಿತ ಸಭೆ ನಡೆಯಿತು.