ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಕಸಬ ಹೋಬಳಿ ಎಂ.ಎಚ್ ಪಟ್ಟಣ ಗ್ರಾಮದಲ್ಲಿ ಕಂದಾಯ ಇಲಾಖೆಯಿಂದ ಏರ್ಪಡಿಸಿದ್ದ ಊರಿಗೆ ಉಪ ವಿಭಾಗಾಧಿಕಾರಿ ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿ ನಹೀದಾ ಜಂ ಜಂ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರಿಗಳು ನೇರವಾಗಿ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂತಹ ಅಭಿಯಾನಗಳನ್ನು ಮಾಡಲಾಗುತ್ತಿದೆ.ತಾಲೂಕು ಕೇಂದ್ರಕ್ಕೆ ಗ್ರಾಮೀಣ ಭಾಗದ ರೈತರು ಬಾರದೇ ಅಲ್ಲಿಯೇ ಬಗೆಹರಿಸುವ ಕಾರ್ಯಕ್ರಮ ಇದಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಮುಂತಾದ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಿ ಆದೇಶ ಪತ್ರಗಳನ್ನು ವಿತರಿಸುವುದು. ಕುಡಿಯುವ ನೀರು, ವಿದ್ಯುತ್, ರಸ್ತೆ ಮತ್ತು ಪಡಿತರ ಚೀಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಸ್ಥಳದಲ್ಲೇ ನಿರ್ದೇಶನ ನೀಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಆರತಿ ಬಿ, ತಾ.ಪಂ ಇಒ ರಂಗನಾಥ್, ಬಿಇಒ ಎಂ.ಎಸ್. ನಟರಾಜ್, ಸಿಡಿಪಿಒ ಕೃಷ್ಣಮೂರ್ತಿ, ಪಿಡಿಒ ಶೇಖರ್, ಮುಖಂಡರಾದ ನರಸಿಂಹಯ್ಯ, ಕಂದಾಯ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.