ಧಾರವಾಡ:

ಮತದಾರರ ಪಟ್ಟಿಯಲ್ಲಿ ತಂದೆ, ಗಂಡನ ಹೆಸರು, ವಯಸ್ಸು, ಫೋಟೊ ಹಾಗೂ ಹೆಸರುಗಳ ವಿವರಗಳು ತಪ್ಪಿದ್ದರೆ ತಿದ್ದುಪಡಿ ಮಾಡಲು ಹಾಗೂ ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಿಳಾಸ ಬದಲಾದರೆ ಹೊಸ ಮತಗಟ್ಟೆಗೆ ಸ್ಥಳಾಂತರಿಸಲು ನಮೂನೆ 8ರಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಲು ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್ ಆರ್. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಪ್ರಗತಿ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ಜರುಗಿಸಿದ ಅವರು, ಹೊಸ ಮತದಾರರ ಗುರುತಿನ ಚೀಟಿ ಪಡೆಯಲು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ, ಹೆಸರು ಸೇರಿಸಿಕೊಳ್ಳಲು ನಮೂನೆ 6ರಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಮರಣ ಹೊಂದಿರುವವರ ಮಾಹಿತಿಯನ್ನು ಕುಟುಬಂದವರು ಬಿಎಲ್‌ಒಗಳಿಗೆ ನೀಡಬೇಕು. ಮಾಹಿತಿ ನೀಡದಿದ್ದಲ್ಲಿ, ಪಂಚನಾಮೆಯ ಮೂಲಕ ಹೆಸರನ್ನು ತೆಗೆದುಹಾಕಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಎಲ್ಲ ಸದಸ್ಯರ ಕ್ರಮ ಸಂಖ್ಯೆ ಅನುಕ್ರಮವಾಗಿರುವಂತೆ ಕ್ರಮವಹಿಸಲು ಮತದಾರರ ನೋಂದಣಾಧಿಕಾರಿಗಳಿಗೆ ತಿಳಿಸಿದರು.

ರಾಜಕೀಯ ಪಕ್ಷಗಳ ಮುಖಂಡರು ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕುರಿತು ಯಾವುದೇ ಸಮಸ್ಯೆ ಹಾಗೂ ದೂರುಗಳು ಇದ್ದಲ್ಲಿ ಜಿಲ್ಲಾಡಳಿತಕ್ಕೆ ಲಿಖಿತ ಪತ್ರಗಳ ಮೂಲಕ ದೂರು ಸಲ್ಲಿಸಬೇಕು. ಜಿಲ್ಲಾಡಳಿತವು ಶೀಘ್ರವೇ ಮಾಹಿತಿ ಒದಗಿಸುತ್ತದೆ. ಈ ಬಗ್ಗೆ ರಾಜಕೀಯ ಪಕ್ಷಗಳ, ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಪಾಲಿಕೆಯ ಆಯುಕ್ತ ಡಾ. ರುದ್ರೇಶ ಎಸ್. ಘಾಳಿ ಇದ್ದರು.