ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿನ ವಿವಿಧ ವಿಷಯಗಳ ಡಿಪ್ಲೋಮಾ ತರಬೇತಿಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ ನಿಗದಿಪಡಿಸಲಾಗಿರುವ 20ರ ಸಂಖ್ಯೆನ್ನು ಹೆಚ್ಚಿಸಲು ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಆರ್.ಪಾಟೀಲ ಹೇಳಿದರು.ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯಕ್ಕೆ ಶನಿವಾರ ಭೇಟಿ ನೀಡಿ, ಅಲ್ಲಿನ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿ-ಸಿಬ್ಬಂದಿಯೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿ, ಪ್ರಸ್ತುತ ಸಿಮ್ಸ್ನಲ್ಲಿ ಈವರೆಗೆ ನೇಮಕವಾಗದೇ ಖಾಲಿ ಉಳಿದಿರುವ ತಂತ್ರಜ್ಞರು, ತಜ್ಞ ವೈದ್ಯಾಧಿಕಾರಿಗಳ ನೇಮಕ, ಮೂಲಭೂತ ಸೌಕರ್ಯ ಸೇರಿದಂತೆ ಎ.ಬಿ.ಸಿ.ಡಿ. ಎಲ್ಲಾ ಶ್ರೇಣಿಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು, ಅಗತ್ಯವಿರುವ ಕಟ್ಟಡಗಳ ನಿರ್ಮಾಣಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಸಿಮ್ಸ್ ನಿರ್ದೇಶಕರಿಗೆ ಸೂಚಿಸಿದರು.
ಖಾಲಿ ಹುದ್ದೆಗಳ ಭರ್ತಿಗೆ ಕ್ರಮವಹಿಸುವ ಮುನ್ನ ಇಲ್ಲಿನ ಅರ್ಹ ಅಧಿಕಾರಿ-ಸಿಬ್ಬಂದಿಗೆ ಬಡ್ತಿ ನೀಡಬೇಕು. ಅಗತ್ಯವಿರುವ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಬೇಕು. ನಂತರ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆಯೇ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಬೇಕು.ಇಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಪ್ರಶಿಕ್ಷಣಾರ್ಥಿಗಳಿಗೆ ವಸತಿ ಸೌಲಭ್ಯದ ಕೊರತೆ ಇರುವುದನ್ನು ಗಮನಿಸಲಾಗಿದೆ. ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ವಸತಿ ಸೌಲಭ್ಯ ಕಲ್ಪಿಸಲು ಗಮನಹರಿಸುವಂತೆಯೂ ಸೂಚಿಸಿದರು.ಕಳೆದ ಮೂರು ತಿಂಗಳ ಅವಧಿಯಲ್ಲಿ ಸರಾಸರಿಯಾಗಿ ಪ್ರತಿದಿನ 2180 ಜನ ಹೊರರೋಗಿಗಳಾಗಿ, 220 ಮಂದಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಇರುವ 950 ಹಾಸಿಗೆಗಳಲ್ಲಿ ಕನಿಷ್ಟ 900 ಜನ ಚಿಕಿತ್ಸಾಲಯದ ಲಾಭ ಪಡೆದುಕೊಳ್ಳುತ್ತಿದ್ದಾರೆ . ಇಲ್ಲಿನ ಎಂ.ಆರ್.ಐ. ಯಂತ್ರದಿಂದ ಪ್ರತಿದಿನ ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಸುಮಾರು 25 ರಿಂದ 30 ಮಂದಿಗೆ ಮಾತ್ರ ಸ್ಕ್ಯಾನ್ ಮಾಡಲಾಗುತ್ತಿದೆ. ಆದರೆ, ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಸಿಬ್ಬಂದಿ ನಿಯೋಜಿಸಿ, ಕನಿಷ್ಟ ಸ್ಕ್ಯಾನಿಂಗ್ ಪ್ರಮಾಣವನ್ನು ಹೆಚ್ಚಿಸಬೇಕು. ಅಗತ್ಯವಿರುವ ಆರೋಗ್ಯ ತಪಾಸಣಾ ಯಂತ್ರಗಳ ಸಂಖ್ಯೆಯನ್ನು ಹೆಚ್ಚಿಸುವಂತೆಯೂ ಅವರು ಸೂಚಿಸಿದರು.
ವೈದ್ಯಕೀಯ ಉನ್ನತ ಶಿಕ್ಷಣಕ್ಕೆ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ವೈದ್ಯಕೀಯ ಪ್ರಶಿಕ್ಷಣಾರ್ಥಿಗಳಿಗೆ ಪ್ರತಿ ವರ್ಷ 30,000 ರು.ಗಳ ವರಗೆ ಸ್ಕಾಲರ್ ಶಿಪ್ ನೀಡುತ್ತಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು. ವೆಂಟಿಲೇಟರ್ಗಳ ಕೊರತೆ ಇದ್ದು, ಅದನ್ನು ಭರ್ತಿ ಮಾಡುವಂತೆ ನಿರ್ದೇಶಕರಿಗೆ ಸೂಚಿಸಿದರು.ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಸ್ಬಾನು, ಡಾ.ಧನಂಜಯ ಸರ್ಜಿ, ಸೂಡಾ ಅಧ್ಯಕ್ಷ ಸುಂದರೇಶ್, ಆರ್.ಪ್ರಸನ್ನಕುಮಾರ್, ಸಿಮ್ಸ್ ಡಾ.ವಿರೂಪಾಕ್ಷಪ್ಪ , ಪ್ರಾಚಾರ್ಯ ಡಾ. ಕೆ.ರಮೇಶಬಾಬು , ಮುಖ್ಯ ಆಡಳಿತಾಧಿಕಾರಿ ಉಮಾ ಸದಾಶಿವ, ವೈದ್ಯಕೀಯ ಅಧೀಕ್ಷಕ ಡಾ.ಟಿ.ಡಿ.ತಿಮ್ಮಪ್ಪ , ಮೆಗ್ಗಾನ್ ಅಧೀಕ್ಷಕ ಡಾ.ಸಿದ್ಧನಗೌಡ ಪಾಟೀಲ್ ಸೇರಿದಂತೆ ಸಿಮ್ಸ್ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.