ಕೊಪ್ಪಳ: ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಇಂದಿನ ಅಗತ್ಯವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ ಎಂದು ಹಿರಿಯ ವೈದ್ಯ ಡಾ. ಕೆ.ಜಿ. ಕುಲಕರ್ಣಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಸಾಂಸ್ಕೃತಿಕ ಕ್ರೀಡೆ ಮತ್ತು ತರಬೇತಿ ಸಂಸ್ಥೆ ವತಿಯಿಂದ ಸಾಹಿತಿ, ಶಿಕ್ಷಣ ಪ್ರೇಮಿ ದಿವಂಗತ ಹಾಜಿ ವಹಿದುದ್ದೀನ್ ಅವರ ಸ್ಮರಣೆಗಾಗಿ ಶಿಕ್ಷಣದಲ್ಲಿ ನೈತಿಕ ಮೌಲ್ಯ ಎಂಬ ವಿಷಯ ಕುರಿತು ಏರ್ಪಡಿಸಿದ ವಿಚಾರ ಸಂಕೀರ್ಣ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಗಣಿನೀಯ ಸಾಧನೆ ಮಾಡಿ ರಾಜ್ಯ ಮತ್ತು ಜಿಲ್ಲೆಯ ಕೀರ್ತಿ ತರುವಲ್ಲಿ ಯಶಸ್ವಿಯಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನೆರವೇರಿಸಿ ಪ್ರತಿಭಾವಂತ ಮಕ್ಕಳಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಮಾತನಾಡಿದರು. ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು, ಅವರ ಭವಿಷ್ಯ ಉಜ್ವಲಗೊಳ್ಳಲು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಅತ್ಯವಶ್ಯಕವಾಗಿದೆ ಮಕ್ಕಳ ಮೇಲೆ ಶಿಕ್ಷಕರಷ್ಟೇ ಪಾಲಕರ ಜವಾಬ್ದಾರಿ ಕೂಡ ಹೆಚ್ಚಾಗಿದೆ, ಪ್ರತಿಯೊಬ್ಬರು ತಮ್ಮ ತಮ್ಮ ಪಾಲಿನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಕೂಡ ಅಷ್ಟೇ ಅಗತ್ಯವಾಗಿದೆ. ಈ ದಿಶೆಯಲ್ಲಿ ಶ್ರಮಿಸುತ್ತಿರುವ ಸಂಸ್ಥೆಗಳಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಹೇಳಿದರು,

ಡಾ. ಕಸ್ತೂರಿ ಕರಮುಡಿ ಮಾತನಾಡಿ, ನೈತಿಕ ಶಿಕ್ಷಣ ಮತ್ತು ಉತ್ತಮ ಆರೋಗ್ಯ ಪ್ರತಿಯೊಬ್ಬರಿಗೆ ಮುಖ್ಯವಾಗಿದೆ. ಆರೋಗ್ಯವೇ ಭಾಗ್ಯ ಎಂದು ಹೇಳಲಾಗುತ್ತಿದ್ದು, ನಾವು ನಮ್ಮ ಜೀವನ ಉತ್ತಮವನ್ನಾಗಿ ಮಾಡಿಕೊಳ್ಳಲು ಉತ್ತಮ ಪರಿಸರ, ಒಳ್ಳೆಯ ಶಿಕ್ಷಣ ಮತ್ತು ಆರೋಗ್ಯ ದ ಕಡೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಅಂದಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಶಿಕ್ಷಣದಲ್ಲಿ ನೈತಿಕ ಮೌಲ್ಯಗಳು ಎಂಬ ವಿಷಯ ಕುರಿತು ಕನಕಗಿರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಡಾ. ಪರವಿನ್ ಬೇಗಂ ಮಾತನಾಡಿ, ಶಿಕ್ಷಣದಿಂದ ಆತ್ಮಸ್ಥೈರ್ಯ ಬರುತ್ತದೆ. ಸತತ ಪರಿಶ್ರಮದಿಂದ ಗುರಿ ಸಾಧಿಸಬೇಕು. ತಮ್ಮ ಬದುಕು ಆದರ್ಶವನ್ನಾಗಿ ಮಾಡಿಕೊಳ್ಳಬೇಕು ಎಂದರು,

ಇಮಾಮ ಮೌಲಾನಾ ಮುಫ್ತಿ ಮೊಹಮ್ಮದ್ ನಜೀರ್ ಅಹಮದ್ ಖಾದ್ರಿ ತಸ್ಕಿನಿ, ಹಂಪ ಸಾಗರ ಅಭಿನವ ನಾಗಭೂಷಣ ಸ್ವಾಮೀಜಿ ಆಶೀರ್ವಚನ ನೀಡಿದರು. ಜುಲೇಖಾ ಬೇಗಂ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಾಹಿತಿ ಶಮೀಮುನ್ನಿಸಾ ಬೇಗಮ್ ಹುನಗುಂದ, ಅನ್ವರ್ ಹುಸೇನ್, ಎಂ. ಬದಿಯುದ್ದೀನ್, ಅಹಮದ್ ನವೀದ, ಹಿರಿಯ ಪತ್ರಕರ್ತ ಸಾಧಿಕ್ ಅಲಿ ಸೇರಿದಂತೆ ಅನೇಕರು ಇದ್ದರು.