ಸಾರಾಂಶ
ಇಂದಿನ ಶಿಕ್ಷಕರೂ ಸಹ ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಇಂತಹ ಪುರಸ್ಕಾರಕ್ಕೆ ಭಾಜನರಾಗಬಹುದು .
ಕನ್ನಡಪ್ರಭ ವಾರ್ತೆ ಪಾಂಡವಪುರ
ಗುರು, ಹಿರಿಯರು ಹಾಗೂ ಪೋಷಕರ ಮಾರ್ಗದರ್ಶನ ಮತ್ತು ಸತತ ಪ್ರಯತ್ನ, ಪರಿಶ್ರಮ ಇದ್ದರೆ ಜೀವನದಲ್ಲಿ ಸಾಧನೆ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹೇಳಿದರು.ತಾಲೂಕಿನ ಬೆಳ್ಳಾಳೆ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಮ್ಮಿಂದ ವಿದ್ಯೆ ಕಲಿತು ಮಾರ್ಗದರ್ಶನ ಪಡೆಯುವ ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡಮಟ್ಟದ ಸಾಧನೆ ಮಾಡುವ ಮೂಲಕ ಯಶಸ್ಸುಗಳಿಸಬೇಕೆಂಬುದು ಪ್ರತಿಯೊಬ್ಬ ಶಿಕ್ಷಕರ ಆಶಯವಾಗಿದೆ ಎಂದರು.
ವಿದ್ಯಾರ್ಥಿ ಜೀವನ ಬಹಳ ಸುಂದ,ರ ಸಂಭ್ರಮ ಮತ್ತು ಮಹತ್ವವಾದದ್ದು. ಆ ದಿಸೆಯಲ್ಲಿ ನೀವು ತೆಗೆದುಕೊಂಡ ನಿರ್ಧಾರಗಳು ಹಾಗೂ ನಿಮ್ಮ ಸುತ್ತಮುತ್ತಲ ವಾತಾವರಣದಿಂದ ಶಾಲೆಯಲ್ಲಿ ವಿದ್ಯೆ ಕಲಿತು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯವಾಗಿದೆ ಎಂದು ಹೇಳಿದರು.ಈ ಹಿಂದೆ ಬಡತನದ ನಡುವೆ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಪೋಷಕರಿಗೆ ಕಷ್ಟವಾಗುತ್ತಿತ್ತು. ಆದರೆ, ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಅಂತಹ ಸಮಸ್ಯೆ ಇಲ್ಲ. ಎಷ್ಟೇ ಕಷ್ಟವಾದರು ಪರವಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆನ್ನುವುದು ಪ್ರತಿಯೊಬ್ಬ ಪೋಷಕರ ಅಭಿಪ್ರಾಯವಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಸಹಾಯಕ ನಿರ್ದೇಶಕ ಸಿ.ಎನ್.ಗೋಪಾಲೆಗೌಡ ಮಾತನಾಡಿ, ತಮಗೆ ವಿದ್ಯೆ ಕಲಿಸಿದ ಶಿಕ್ಷಕರನ್ನು ಗುರುತಿಸಿ ಗುರುವಂದನೆ ಸಲ್ಲಿಸುತ್ತಿರುವ ಶ್ಲಾಘನೀಯ. ಗುರುಗಳನ್ನು ದೇವರಿಗೆ ಹೋಲಿಸುವ ಸಂಸ್ಕೃತಿ ನಮ್ಮದು. ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವುದು ನಿಜಕ್ಕೂ ಹಿರಿಯ ವಿದ್ಯಾರ್ಥಿಗಳು ಸಾರ್ಥಕ ಕೆಲಸವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸಮಾಜ ಸೇವಕ ಹಾಗೂ ವಕೀಲ ಅರವಿಂದ್ ರಾಘವನ್ ಮಾತನಾಡಿ, ಇಂದಿನ ಶಿಕ್ಷಕರೂ ಸಹ ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಇಂತಹ ಪುರಸ್ಕಾರಕ್ಕೆ ಭಾಜನರಾಗಬಹುದು ಎಂದರು.
ಎಲ್ಲಾ ಹಿರಿಯ ಶಿಕ್ಷಕರನ್ನು ವಿದ್ಯಾರ್ಥಿಗಳು ಅಭಿನಂದಿಸಿದರು. ಸಮಾರಂಭದಲ್ಲಿ ಬೆಳ್ಳಾಳೆ ಸರಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಶಾಂತರಾಜ್, ಹಿರಿಯ ಸಹಶಿಕ್ಷಕ ಎಲ್.ಕೇಶವಮೂರ್ತಿ, ಶಿಕ್ಷಕರಾದ ಎಚ್.ಜಿ.ರಾಜಪಾಲ್ ಹೊಸಕೋಟೆ, ಅತ್ತಿಗಾನಹಳ್ಳಿ ಬೋರೇಗೌಡ, ದೈಹಿಕ ಶಿಕ್ಷಕ ಶ್ರೀನಿವಾಸ್ ಕಡತನಾಳು, ಆನಂದ್, ರಾಜು, ಸುಮತಿ, ವಿಜಯ ಸೇರಿದಂತೆ ಶಿಕ್ಷಕರು ಮತ್ತು ಹಿರಿಯ ವಿದ್ಯಾರ್ಥಿಗಳು ಇದ್ದರು.