ಎನ್‌ಡಿಎ ಪರ್ಯಾಯವಾಗಿ ಎಸ್‌ಯುಸಿಐ ಸ್ಪರ್ಧೆ

| Published : Mar 26 2024, 01:21 AM IST

ಸಾರಾಂಶ

೨೦೨೪ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಇವರ ವಿರುದ್ಧ ಪರ್ಯಾಯವಾಗಿ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ ಎಂದು ರಾಜ್ಯ ಸಮಿತಿ ಸದಸ್ಯ ಬಿ. ರವಿ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ೨೦೨೪ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಇವರ ವಿರುದ್ಧ ಪರ್ಯಾಯವಾಗಿ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ ಎಂದು ರಾಜ್ಯ ಸಮಿತಿ ಸದಸ್ಯ ಬಿ. ರವಿ ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದ ೧೯ ರಾಜ್ಯ, ೩ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು ೧೫೧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಕರ್ನಾಟಕದಲ್ಲಿ ಒಟ್ಟು ೧೯ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ ಎಂದರು.

ಕಳೆದ ೧೦ ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. ೨೦೧೪ರಲ್ಲಿ ಬಿಜೆಪಿ ದನಿ ಎತ್ತಿದ ಬೆಲೆಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ.

ಅಬ್ಬರದ ಪ್ರಚಾರ ಮಾಡಿದ ’ಗುಜರಾತ್ ಮಾದರಿ’ ಅದೃಶ್ಯವಾಗಿದೆ. ಕಪ್ಪುಹಣ, ಸ್ವಿಸ್ ಬ್ಯಾಂಕ್ ಖಾತೆಗಳ ಬಗ್ಗೆ ಇರಲಿ, ಎಸ್‌ಬಿಐಯಲ್ಲಿರುವ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡದಂತೆ ತಡೆಯಲು ಸರ್ವ ಪ್ರಯತ್ನ ಮಾಡಿದೆ. ಎಂದು ಅರೋಪಿಸಿದರು.

ಜಾಗತಿಕ ಹಸಿವಿನ ಸೂಚ್ಯಂಕ, ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಭಾರತದ ಸ್ಥಾನ ಪಾತಾಳದಲ್ಲಿದೆ. ಆದರೆ ಮೋದಿ ಅವರು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಇಷ್ಟು ವರ್ಷ ಆಳ್ವಿಕೆ ನಡೆಸಿ ದೇಶವನ್ನು ಹಾಳುಗೆಡವಿದ ಕಾರಣ ದೇಶವನ್ನು ಅಭಿವೃದ್ಧಿಯ ಪಥಕ್ಕೆ ತರಲು ಇನ್ನೂ ಒಂದು ಅವಕಾಶ ಕೊಡಿ ಎಂದು ಕೇಳುತ್ತಾರೆ. ಹಿಂದೆ ಕಾಂಗ್ರೆಸ್ ಆಳ್ವಿಕೆಯಲ್ಲಿ ಅವರು ಇದೇ ರೀತಿ ಬ್ರಿಟಿಷರ ಮೇಲೆ ಗೂಬೆ ಕೂರಿಸುತ್ತಿದ್ದರು. ಮೋದಿಯವರ ಆಳ್ವಿಕೆಯಲ್ಲಿ ಅಂಬಾನಿ, ಅದಾನಿಗಳು ವಿಕಸಿತಗೊಂಡು ಜಗತ್ತಿನ ಅತಿ ಶ್ರೀಮಂತ ಬಂಡವಾಳಶಾಹಿಗಳಾಗಿದ್ದಾರೆ ಎಂದರು,

ಇಂತಹ ಕೋಮುವಾದಿ, ಫ್ಯಾಸೀವಾದಿ, ಬಂಡವಾಳಶಾಹಿ ನೀತಿಗಳ ವಿರುದ್ಧ ಈ ಚುನಾವಣೆಯಲ್ಲಿ ಜನಪರ ಧ್ವನಿ ಮೊಳಗಬೇಕು. ಆದರೆ ಕಾಂಗ್ರೆಸ್ ನೇತೃತ್ವದ ವಿವಿಧ ಅವಕಾಶವಾದಿ ಪ್ರಾದೇಶಿಕ ಪಕ್ಷಗಳ ಕೂಟವಾದ ಇಂಡಿಯಾ ನೈಜ ಧರ್ಮನಿರಪೇಕ್ಷ, ಪ್ರಜಾತಾಂತ್ರಿಕ ಪರ್ಯಾಯವನ್ನು ನೀಡಲು ಖಂಡಿತ ಅಸಾಧ್ಯ ಬಿಜೆಪಿ ಬೆಳೆದು ಅಧಿಕಾರಕ್ಕೆ ಬರುವವರೆಗೆ ದೇಶದ ಬಂಡವಾಳಶಾಹಿಗಳ ಸೇವೆಗೈದಿರುವುದು ಇದೇ ಕಾಂಗ್ರೆಸ್ ಎನ್ನುವುದರಲ್ಲಿ ಸಂಶಯವಿಲ್ಲ. ಹಾಗಾಗಿ ಎನ್‌ಡಿಎ ಮತ್ತು ಇಂಡಿಯಾ ಎರಡು ಮೈತ್ರಿಕೂಟಗಳು ಕೂಡ ಬಂಡವಾಳಶಾಹಿ ವರ್ಗದ ಎರಡು ಪರ್ಯಾಯಗಳಾಗಿವೆ ಎಂದರು.

ಈ ಚುನಾವಣೆ ಬಂಡವಾಳಶಾಹಿ ಮತ್ತು ಕಾರ್ಮಿಕರ ನಡುವಿನ, ಶೋಷಕರು ಮತ್ತು ಶೋಷಿತರ ನಡುವಿನ ಸಮರವಾಗಿದೆ. ಭಾರತದ ಶೋಷಿತ ದುಡಿಯುವ ವರ್ಗದ, ಬಡ ರೈತರ ಪರ್ಯಾಯವಾಗಿ ದೇಶದ ಎಡಪಕ್ಷಗಳು ಒಂದು ಒಕ್ಕೂಟದ ಮೂಲಕ ಜನ ಹೋರಾಟಗಳನ್ನು ಕಟ್ಟಬೇಕಾಗಿತ್ತು. ಚುನಾವಣೆಗಳು ಪರಿಹಾರವಲ್ಲ, ಸಮಾಜವಾದವೇ ನೈಜ ಪರಿಹಾರ ಎಂಬ ಪ್ರಚಾರವನ್ನು ಕೈಗೆತ್ತಿಕೊಳ್ಳಬೇಕಿತ್ತು. ಆದರೆ ದುರಂತವೆಂದರೆ ಸಿಪಿಐ, ಸಿಪಿಐಎಂ ನಂತಹ ಎಡವಾದಿ ಪಕ್ಷಗಳು ಕೆಲವು ಎಂಪಿ ಸೀಟುಗಳ ಆಸೆಗೆ ಇಂಡಿಯಾ ಮೈತ್ರಿಕೂಟವನ್ನು ಸೇರಿವೆ. ಇಂತಹ ಪರಿಸ್ಥಿತಿಯಲ್ಲಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ಶೋಷಿತ ಜನರ ನೈಜ ಹೋರಾಟದ ಪರ್ಯಾಯವಾಗಿ ತನ್ನ ಶಕ್ತಿಮೀರಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ ಎಂದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಾಮ್ರಡ್ ಸುಮಾ ಎಸ್. ಅವರು ಸ್ಪರ್ಧಿಸುತ್ತಿದ್ದು ಕಾಮೇಡ್ ಶಿವದಾಸ್ ಘೋಷ್ ಅವರ ಚಿಂತನೆಗಳಿಗೆ ಆಕರ್ಷಿತರಾಗಿ ಹಲವಾರು ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಎಐಡಿವೈಒ ಯುವಜನ ಸಂಘಟನೆಯ ಮೈಸೂರು ಜಿಲ್ಲಾ ಕಾರ್ಯದರ್ಶಿಯಾಗಿ, ರಾಜ್ಯ ಸಮಿತಿಯ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಖಾಲಿ ಹುದ್ದೆಗಳ ಭರ್ತಿಗೆ, ಅತಿಥಿ ಶಿಕ್ಷಕರ ಸಮಸ್ಯೆಗಳ ವಿರುದ್ಧ, ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳ ವಿರುದ್ಧ ಯುವಜನರ ಚಳವಳಿಯನ್ನು ಕಟ್ಟಿದ್ದಾರೆ. ಯುವಜನರಲ್ಲಿ ಸದಭಿರುಚಿಯನ್ನು ಬೆಳೆಸಲು ಮೌಲ್ಯಾಧಾರಿತ ಸಾಂಸ್ಕೃತಿಕ ಚಟುವಟಿಕೆಗಳು, ಗ್ರಾಮೀಣ ಕ್ರೀಡಾಕೂಟಗಳು ಇತ್ಯಾದಿ ಸಂಘಟಿಸಿದ್ದಾರೆ. ಕಳೆದ 10 ವರ್ಷಗಳಿಂದ ಎಸ್ಯುಸಿಐ(ಸಿ) ಪಕ್ಷದ ಸದಸ್ಯರಾಗಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಸುಮಾ ಎಸ್. ಯಶೋಧರ್ ವಿ., ಸೀಮಾ ಜಿಎಸ್, ಸಂಧ್ಯಾ ಪಿಎಸ್ ಇದ್ದರು.