ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ, ಮಹಾನಗರ ಪಾಲಿಕೆಗಳ ಸಹಯೋಗದಲ್ಲಿ 2025-26ನೇ ಸಾಲಿನ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ವಿಜಯಪುರ ತಾಲೂಕಿನ ಬುರಣಾಪೂರ ಗ್ರಾಮದಲ್ಲಿ ಬುಧವಾರ ಸಮಗ್ರ ಶ್ವಾನ ಆರೈಕೆ ಕೇಂದ್ರ ನಿರ್ಮಾಣ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಸುಧಾ ಮೂರ್ತಿ ಅವರು, ಸುಪ್ರಿಂ ಕೋರ್ಟ್ ನಿರ್ದೇಶಾನುಸಾರ ಸುಸಜ್ಜಿತ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಈ ಕೇಂದ್ರಕ್ಕೆ ನೀರಿನ ವ್ಯವಸ್ಥೆ, ಎಬಿಸಿ ಸೆಂಟರ್ ನಿರ್ಮಾಣ ಮಾಡಲಾಗಿದ್ದು, ಈ ಕೇಂದ್ರದಲ್ಲಿ ಅನಾರೋಗ್ಯಕ್ಕೊಳಗಾದ, ಗಾಯಗೊಂಡ ಒಟ್ಟು 500 ನಾಯಿಗಳಿಗೆ ಆಶ್ರಯ ಒದಗಿಸಲಾಗುವುದು. ಸಂಸದರ ಪ್ರದೇಶಾಭಿವೃದ್ದಿ ನಿಧಿಯಿಂದ ಎರಡು ಕೋಟಿ ವೆಚ್ಚದಲ್ಲಿ ಈ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಶ್ವಾನಗಳಿಗೆ ಈ ಕೇಂದ್ರ ಅನುಕೂಲ ಕಲ್ಪಿಸಲಿದೆ ಎಂದು ಹೇಳಿದರು.

ಈ ವೇಳೆ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಅಶೋಕ ಘೋಣಸಗಿ, ರಶ್ಮಿ ಪಾಟೀಲ, ಪಾಲಿಕೆ ವೈದ್ಯಾಧಿಕಾರಿ ಎಸ್.ಎಲ್.ಲಕ್ಕಣ್ಣವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.