ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ನಾನು ಸಹಿಸುವುದಿಲ್ಲ. ಕುಡಿಯುವ ನೀರು ಹಾಗೂ ಮೇವಿಗೆ ಮುಂಜಾಗೃತ ಕ್ರಮ ವಹಿಸಿ ಎಂದು ಆದೇಶಿಸಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಬೇಸಿಗೆ ಆರಂಭವಾಗಿದ್ದು, ಜನ, ಜಾನುವಾರುಗಳು ಕುಡಿಯುವ ನೀರು ಹಾಗೂ ಮೇವಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಟ್ಟಣದ ಪ್ರಜಾ ಸೌಧದ ಸಭಾ ಭವನದಲ್ಲಿ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒಗಳಿಂದ ಮಾಹಿತಿ ಪಡೆದ ಬಳಿಕ ಮಾತನಾಡಿದರು.

ಬೇಸಿಗೆ ಕಾಲದಲ್ಲಿ ಜನರಿಗೆ ಕುಡಿಯುವ ನೀರು ಸಮರ್ಪಕ ರೀತಿಯಲ್ಲಿ ಒದಗಿಸಬೇಕು ಹಾಗೂ ಜಾನುವಾರುಗಳಿಗೂ ನೀರು ಹಾಗೂ ಮೇವಿಗೂ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ನಾನು ಸಹಿಸುವುದಿಲ್ಲ. ಕುಡಿಯುವ ನೀರು ಹಾಗೂ ಮೇವಿಗೆ ಮುಂಜಾಗೃತ ಕ್ರಮ ವಹಿಸಿ ಎಂದು ಆದೇಶಿಸಿದರು.

ಬೇಸಿಗೆ ಕಾಲವಾದ ಕಾರಣ ಸಾಂಕ್ರಾಮಿಕ ರೋಗಗಳು ಹರಡದಂತೆ ತಾಲೂಕು ಆರೋಗ್ಯ ಇಲಾಖೆ ಮುಂಜಾಗೃತ ಕ್ರಮ ತೆಗೆದುಕೊಳ್ಳಬೇಕು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಗ್ರಾಪಂ ಪಿಡಿಒಗಳು ಸ್ವಚ್ಛತೆಗೂ ನಿಗಾ ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಎಪಿಎಂಸಿ ಅಧ್ಯಕ್ಷ ಆರ್.ಎಸ್.ನಾಗರಾಜು, ತಹಸೀಲ್ದಾರ್‌ ಎಂ.ಎಸ್.ತನ್ಮಯ್‌, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಷಣ್ಮುಗಂ, ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಶ, ಕೃಷಿ ಸಹಾಯಕ ನಿರ್ದೇಶಕ ಶಶಿಧರ್‌, ಸಿಡಿಪಿಒ ಎಂ.ಹೇಮವತಿ, ಕಾಡ ಎಇಇ ಮಹೇಶ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒಗಳಿದ್ದರು.