ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಬೇಸಿಗೆ ಶಿಬಿರದ ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತ ಚಟುವಟಿಕೆಗಳಲ್ಲಿನ ಪ್ರದರ್ಶನದಲ್ಲಿ ಮಕ್ಕಳ ಏಕಾಗ್ರತೆ ತುಂಬಾ ಉತ್ತಮವಾಗಿದ್ದು, ತಮ್ಮ ಎಲ್ಲ ಕಲಿಕಾ ಚಟುವಟಿಕೆಗಳಲ್ಲಿ ಇದನ್ನು ಮೈಗೂಡಿಸಿಕೊಳ್ಳಬೇಕು. ಇಂಥ ಶಿಬಿರಗಳು ಮಕ್ಕಳ ಕ್ರಿಯಾಶೀಲತೆಗೆ ಸಹಕಾರಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ತಿಳಿಸಿದರು.ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ವತಿಯಿಂದ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಲಾದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ, ಶಿಬಿರಾರ್ಥಿಗಳ ಯೋಗ, ನೃತ್ಯ ಪ್ರದರ್ಶನವನ್ನು ವೀಕ್ಷಿಸಿ ಮಕ್ಕಳು ವೇದಿಕೆಯನ್ನು ಉತ್ತಮವಾಗಿ ಸದುಪಯೋಗಪಡಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿಯೂ ಆಸಕ್ತಿಯನು ಅನುಪಾಲನೆ ಮಾಡುವಂತೆ ಸಲಹೆ ನೀಡಿದರು.ನಗರ ಪ್ರಾಧಿಕಾರ ಯೋಜನೆಯ ಸದಸ್ಯರಾದ ಮಿನಾಜ್ ಪ್ರವೀಣ್ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭಾ ಪ್ರದರ್ಶನಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆಯಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ ಮಾತನಾಡಿ, ಬೇಸಿಗೆ ಶಿಬಿರದಲ್ಲಿ ಮಕ್ಕಳು ಉತ್ತಮವಾಗಿ ಭಾಗವಹಿಸಿ ಶಿಬಿರದಲ್ಲಿ ಹೇಳಿಕೊಟ್ಟಂತಹ ಎಲ್ಲ ಚಟುವಟಿಕೆಗಳಲ್ಲಿ ಉತ್ಸುಕರಾಗಿ ಪಾಲ್ಗೊಂಡು ಪ್ರದರ್ಶನ ನೀಡಿದ್ದಾರೆ ಎಂದು ಹೇಳಿದರು.ಜಿಲ್ಲಾ ಬಾಲಭವನದ ವತಿಯಿಂದ ಹಮ್ಮಿಕೊಂಡ ಶಿಬಿರದಲ್ಲಿ ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರ, ಬಾಲಭವನ, ಮತ್ತು ಇತರೆ ಮಡಿಕೇರಿ ನಗರದ ಮಕ್ಕಳು ಪಾಲ್ಗೊಂಡು ಉತ್ತಮವಾಗಿ ತರಬೇತಿ ಪಡೆದಿರುತ್ತಾರೆ. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳ ಮತ್ತು ಬಾಲಭವನದ ಸಿಬ್ಬಂದಿ ಪರಿಶ್ರಮದ ಫಲವಾಗಿ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.ಶಿಬಿರದಲ್ಲಿ ಮಕ್ಕಳು 15 ದಿನದಲ್ಲಿ ಕಲಿತ ಎಲ್ಲ ಚಟುವಟಿಕೆಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು. ಮಕ್ಕಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.ಯೋಗ ಶಿಕ್ಷಕರಾದ ಆಲಿಮ ಮತ್ತು ಸುಗಮ ಸಂಗೀತಕ್ಕೆ ಅರ್ಪಿತಾ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಕಾರ್ಯಕ್ರಮ ಸಂಯೋಜಕರಾದ ಹರೀಶ್, ನೀತು, ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ಬಾಲಭವನ ಸಹಾಯಕರಾದ ಪೂಜಾ ಸ್ವಾಗತಿಸಿ, ನಿರೂಪಿಸಿದರು.