ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಮ್ಮ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನಡೆಸುವ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ. ಬೇಸಿಗೆ ಶಿಬಿರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್.ದಳವಾಯಿ ಹೇಳಿದರು.ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರಕ್ಕೆ ಸಸಿಗೆ ನೀರುಣಿಸಿ, ಉದ್ಘಾಟನೆ ಮಾಡಿ ಮಾತನಾಡಿದರು.
ರೋವರ್ಸ್ ಮತ್ತು ರೇಂಜರ್ಸ್ಗಳು ಪರಿಸರ ಸಂರಕ್ಷಣೆ ಮಾಡುವ ಸಂಕಲ್ಪ ಮಾಡಿ, ನಮ್ಮ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನಿಯಮಗಳು ತಪ್ಪದೇ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಮಾತನಾಡಿ, ನಮ್ಮ ಪದವಿ ವಿದ್ಯಾರ್ಥಿಗಳಿಗೆ ಶಿಬಿರಗಳು ಉತ್ತಮ ನಡುವಳಿಕೆ ಕಲಿಸುತ್ತೇವೆ. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿಜ್ಞಾ ವಿಧಿಯಂತೆ ವಿದ್ಯಾರ್ಥಿಗಳು ದೇವರು ಮತ್ತು ದೇಶ ಸೇವೆ ಮಾಡುವ ಮನೋಭಾವ ಬೆಳೆಸಿಕೊಂಡು, ಸಮಾಜ ಸೇವೆಯ ಮೂಲಕ ತಮ್ಮಲ್ಲಿ ನಂಬಿಕೆ ಮತ್ತು ವಿಶ್ವಾಸ ಗಳಿಸಲು ಸಾಧ್ಯವಿದೆ ಎಂದು ಹೇಳಿದರು
ಮುಖ್ಯ ಅತಿಥಿಗಳಾಗಿ ಜಿಲ್ಲಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಚಾಲಕ ಪ್ರಮೋದ ಚೌಗಲೆ ಪಾಲ್ಗೊಂಡು ಮಾತನಾಡಿ, ಪ್ರತಿ ವರ್ಷ ನಡೆಸುವ ಬೇಸಿಗೆ ಶಿಬಿರಗಳಿಂದ ವಿದ್ಯಾರ್ಥಿಗಳು ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಪೂರಕವಾಗಿದ್ದು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದಲ್ಲಿ ಪ್ರತಿಶತ 5 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ರೇಂಜರ್ಸ್, ರೋವರ್ಸ್ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಸರಿಯಾಗಿ ಅರಿತುಕೊಂಡರೆ ಸುಂದರ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ರೋವರ್ಸ್ ಸ್ಕೌಟ್ಸ್ ಲೀಡರ್ ರವಿ ಗಡದನ್ನವರ ಅವರು ಅಳತೆ ಮತ್ತು ಅಂದಾಜು ಮಹತ್ವ ಕುರಿತು ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ರೋವರ್ಸ್ ಲೀಡರ್ ಪ್ರೊ.ಪರಸಪ್ಪ ತಳವಾರ ಪ್ರಾಸ್ತಾವಿಕ ನುಡಿ ಹೇಳಿದರು. ರೇಂಜರ್ಸ್ ಲೀಡರ್ ಡಾ.ಸುಮಂಗಲಾ ಮೇಟಿ, ರೋವರ್ಸ್ ಲೀಡರ್ ಡಾ.ಚಂದ್ರಶೇಖರ ಕಾಳನ್ನವರ, ರೇಂಜರ್ಸ್ ಲೀಡರ್ ಪ್ರೊ.ಸವಿತಾ ಬದಾಮಿ, ಸುಮಿತ್ರಾ ಕಾಂಬೊಜಿ ಅವರು ವೇದಿಕೆ ಮೇಲೆ ಉಪಸ್ಥಿತರಿದ್ದರು. ಶಿಬಿರದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಅರವತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.