ಕಾರ್ಕಳ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಪಶ್ಚಿಮ ಬಂಗಾಳದಲ್ಲಿ ದೀರ್ಘ ಕಾಲದ ಅರಾಜಕತೆಗೆ ಮತದಾರರು ಅಂತ್ಯ ಹಾಡಿದ್ದಾರೆ ಎಂದು ಹೇಳಿದ್ದಾರೆ. ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕನಸು ಸಾಕಾರಗೊಂಡಿದ್ದು, ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ಜನತೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ನಾಯಕತ್ವದ ನಿರಂತರ ಪ್ರಯತ್ನದಿಂದ ಈ ಫಲಿತಾಂಶ ಸಾಧ್ಯವಾಗಿದೆ ಎಂದರು.

ಅಸ್ಸಾಂನಲ್ಲಿ ಸತತ ಮೂರನೇ ಬಾರಿ ಬಿಜೆಪಿ ಗೆಲುವು ಸಾಧಿಸಿರುವುದನ್ನೂ, ಪುದುಚೇರಿಯಲ್ಲಿ ಎನ್‌ಡಿಎ ಅಭೂತಪೂರ್ವ ಜಯ ಗಳಿಸಿರುವುದನ್ನೂ ಅವರು ಪ್ರಶಂಸಿಸಿದರು. ಪಂಚ ರಾಜ್ಯಗಳಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿದಿರುವುದಕ್ಕೆ ಕಾರ್ಯಕರ್ತರ ಅವಿಶ್ರಾಂತ ಶ್ರಮವೇ ಕಾರಣ ಎಂದು ಹೇಳಿ, ಅವರಿಗೆ ಅಭಿನಂದನೆ ಸಲ್ಲಿಸಿದರು.