ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಅವಹೇಳನಕಾರಿ ಹೇಳಿಕೆ ನೀಡಿದಾಗ ಮೌನವಾಗಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಇದೀಗ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೊನ್ನೆ ಮೊನ್ನೆ ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದವರು ಈಗ ಗೋಸುಂಬೆಯಂತೆ ಬಣ್ಣ ಬದಲಾಯಿಸಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನು ಸಿದ್ದರಾಮುಲ್ಲಾ ಖಾನ್, ದೇಶದ್ರೋಹಿ, ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ನಿಂದಿಸಿದಾಗ ಸುನೀಲ್ ಕುಮಾರ್ ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ್ದರು.ಸಿದ್ದರಾಮಯ್ಯನವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಲಾಗುತ್ತಿದ್ದಾಗಲೂ ಸುನೀಲ್ ಕುಮಾರ್ ಮೌನವಾಗಿದ್ದರು. ಇಂದು ಕಾಂಗ್ರೆಸ್ ಪಕ್ಷದ ಒಳಗಿನ ವಿಚಾರಗಳ ಬಗ್ಗೆ ಮಾತನಾಡುವುದು ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವರನ್ನು ಬಿಜೆಪಿ ನಾಯಕ ಯತ್ನಾಳ್ ಅವರು ನಿರಂತರವಾಗಿ ಟೀಕಿಸುತ್ತಿದ್ದರೂ ಸುನೀಲ್ ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಯಡಿಯೂರಪ್ಪನವರ ಅವಮಾನವನ್ನು ಅವರು ಒಪ್ಪಿಕೊಂಡಿದ್ದಾರೆಯೇ ಎಂದು ಶುಭದ ರಾವ್ ಪ್ರಶ್ನಿಸಿದ್ದಾರೆ. ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯೆ ನೀಡಿ ಸಮಯ ವ್ಯರ್ಥ ಮಾಡುವ ಬದಲು ಕಾರ್ಕಳ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನಹರಿಸಲಿ ಎಂದು ಅವರು ಆಗ್ರಹಿಸಿದ್ದಾರೆ.