ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸುವಂತೆ ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆ, ವಿತರಣೆ, ದಾಸ್ತಾನು ಮತ್ತಿತರ ವಿಷಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಗಾರು ಸಂದರ್ಭದಲ್ಲಿ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೃಷಿಕರಿಂದ ದೂರು ಕೇಳಿ ಬರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ನುಡಿದರು.ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಜಿಲ್ಲೆಗೆ ಬೇಕಿರುವ ರಸಗೊಬ್ಬರ ದಾಸ್ತಾನು ಮಾಡಿಕೊಂಡು ಕೃಷಿಕರಿಗೆ ಕಾಲಕಾಲಕ್ಕೆ ಪೂರೈಸಬೇಕು. ರಸಗೊಬ್ಬರ ದಾಸ್ತಾನು, ವಿತರಣೆ ಸಂಬಂಧ ಮಾಹಿತಿಯ ಪಟ್ಟಿಯನ್ನು ಪ್ರತಿ ನಿತ್ಯ ಪ್ರಕಟಿಸುವುದರ ಜೊತೆಗೆ ಮಾಧ್ಯಮಗಳಲ್ಲಿಯೂ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಜಿ.ಪಂ. ಸಿಇಒ ವರ್ಣಿತ್ ನೇಗಿ ಮಾತನಾಡಿ ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ದೂರುಗಳು ಕೇಳಿಬರಬಾರದು ಎಂದರು.ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ಮಾಹಿತಿ ನೀಡಿ ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದು, ಜಿಲ್ಲೆಗೆ 80,946 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಎಸ್ಎಸ್ಪಿಗೆ ಬೇಡಿಕೆ ಇದ್ದು, ಈಗಾಗಲೇ 15,885 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದ್ದು, ಒಟ್ಟಾರೆ 35,062 ಮೆ.ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು.ಮುಂಗಾರು ಸಂದರ್ಭದಲ್ಲಿ ಭತ್ತ ಹಾಗೂ ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಭತ್ತವನ್ನು ನೀರಾವರಿ ಮತ್ತು ಮಳೆಯಾಶ್ರಿತ ಸೇರಿ 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. 3500 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆ. ಹಾಗೆಯೇ 70 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯುವ ಗುರಿ ಹೊಂದಲಾಗಿದೆ. ಒಟ್ಟು 32,570 ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಕೃಷಿ ಮಾಡುವ ಗುರಿ ಇದೆ ಎಂದು ಅವರು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಭಿತ್ತನೆ ಬೀಜ ಬೇಡಿಕೆ, ಸರಬರಾಜು, ವಿತರಣೆ ಹಾಗೂ ದಾಸ್ತಾನು ಸಂಬಂಧಿಸಿದಂತೆ ಭತ್ತ ಬಿತ್ತನೆ ಬೀಜ 1514 ಕ್ವಿಂಟಲ್ ಪೂರೈಕೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ 1871 ಕ್ವಿಂಟಲ್ ಭತ್ತ ಬಿತ್ತನೆ ಬೀಜ ವಿತರಣೆ ಗುರಿ ಹೊಂದಲಾಗಿದೆ.ಮುಸುಕಿನ ಜೋಳ ಸಂಬಂಧಿಸಿದಂತೆ 3.76 ಕ್ವಿಂಟಲ್ ಬಿತ್ತನೆ ಬೀಜ ಪೂರೈಕೆಯಾಗಿದ್ದು, ಅಗತ್ಯ ದಾಸ್ತಾನು ಇದೆ. 2024ರ ಮುಂಗಾರು ಹಂಗಾಮಿನಲ್ಲಿ ಒಟ್ಟಾರೆ 1913 ಕ್ವಿಂಟಲ್ ಭತ್ತ ಮತ್ತು ಮುಸುಕಿನ ಜೋಳದ ಬೆಳೆಗಳ ಬೀಜ ವಿತರಣೆಗೆ ಗುರಿ ನಿಗದಿಪಡಿಸಲಾಗಿದೆ.
ಭತ್ತ ಮತ್ತು ಮುಸುಕಿನ ಜೋಳದ ಬೆಳೆಗಳು ಜಿಲ್ಲೆಯ ಪ್ರಮುಖ ಕೃಷಿ ಬೆಳೆಗಳಾಗಿದ್ದು, ಭತ್ತದ ಬಿತ್ತನೆ ಮತ್ತು ನಾಟಿ ಕಾರ್ಯಗಳನ್ನು ಜೂನ್ ಅಂತ್ಯದಿಂದ ಪ್ರಾರಂಭಗೊಂಡು, ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ಹಾಗೂ ಮುಸುಕಿನ ಜೋಳದ ಬಿತ್ತನೆ ಕಾರ್ಯವನ್ನು ಜೂನ್ ತಿಂಗಳಿನಲ್ಲಿ ಕೈಗೊಳ್ಳಲಾಗುತ್ತದೆ.ಪ್ರಸ್ತುತ ಜಿಲ್ಲೆಯ 16 ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ವಿವಿಧ ತಳಿಗಳ ಬಿತ್ತನೆ ಬೀಜಗಳನ್ನು ಕೆಎಸ್ಎಸ್ಸಿ ಮತ್ತು ಎನ್ಎಸ್ಸಿ ಸಂಸ್ಥೆಗಳಿಂದ ಪಡೆದು, ದಾಸ್ತಾನು ಮಾಡಲಾಗಿದ್ದು, ವಿತರಣೆಗೆ ಕ್ರಮವಹಿಸಲಾಗಿರುತ್ತದೆ.
ವಿವಿಧ ಇಲಾಖೆ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಇತರರು ಇದ್ದರು.