ಸಾರಾಂಶ
ಚಿತ್ರದುರ್ಗ: ದೇಶದ ಭವಿಷ್ಯದ ಬಗ್ಗೆ ದೂರದೃಷ್ಟಿಯಿಟ್ಟುಕೊಂಡಿರುವ ನರೇಂದ್ರ ಮೋದಿ ಮೂರನೆ ಬಾರಿಗೆ ಪ್ರಧಾನಿಯಾಗಬೇಕಾಗಿರುವುದರಿಂದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸುವಂತೆ ಮಾಜಿ ಶಾಸಕ ರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.
ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನತೆಗೆ ಕೊಟ್ಟಿರುವ 5 ಗ್ಯಾರಂಟಿಗಳು ಶಾಶ್ವತವಲ್ಲ. ದೇಶಕ್ಕಾಗಿ ಮೋದಿ ಗ್ಯಾರಂಟಿ. ಹತ್ತು ವರ್ಷಗಳ ಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದ ನರೇಂದ್ರ ಮೋದಿಯಿಂದ ಯಾರಿಗೂ ತೊಂದರೆಯಾಗಿಲ್ಲ. ಕಾಂಗ್ರೆಸ್ ಮಾದಿಗರನ್ನು ಕಡೆಗಣಿಸಿದೆ. ಆದ್ದರಿಂದ ಬಿಜೆಪಿಯನ್ನುಬೆಂಬಲಿಸಲು ತೀರ್ಮಾನಿಸಿದ್ದೇವೆಂದು ಹೇಳಿದರು.ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಚ್.ಹನುಮಂತಪ್ಪ ಮಾತನಾಡಿ, ಹಿರಿಯ ಅನುಭವಿ ರಾಜಕಾರಣಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ನಮ್ಮ ಬೆಂಬಲವಿದೆ. ಲೋಕಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರು ಜಾಸ್ತಿಯಿದ್ದಾರೆ. ಮೀಸಲಾತಿ ವರ್ಗಿಕರಣದಿಂದ ಮಾದಿಗ ಸಮಾಜಕ್ಕೆ ಕಾಂಗ್ರೆಸ್ ವಂಚಿಸಿದೆ. 30 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮೀಸಲಾತಿಯನ್ನು 15-17ಕ್ಕೆ ಹೆಚ್ಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದರು. ಸಿದ್ದರಾಮಯ್ಯ ಗೊಂದಲ ಸೃಷ್ಟಿಸಿದರೆ ವಿನಃ ಅನುಕೂಲವೇನು ಆಗಲಿಲ್ಲ. ಅದಕ್ಕಾಗಿ ಗೋವಿಂದ ಕಾರಜೋಳರಿಗೆ ಮತ ಎಂದರು. ಪರಿಶಿಷ್ಟ ಜಾತಿಯ 5 ಕ್ಷೇತ್ರಗಳಲ್ಲಿ ಮಾದಿಗರಿಗೆ ಎಲ್ಲಿಯೂ ಕಾಂಗ್ರೆಸ್ ಟಿಕೆಟ್ ಕೊಟ್ಟಿಲ್ಲ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 4 ಲಕ್ಷ ಮಾದಿಗರ ಮತಗಳಿವೆ. ಮುಧೋಳದಲ್ಲಿ 6 ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಸಾಕಷ್ಟು ಅಭಿವೃದ್ಧಿಪಡಿಸಿರುವ ಗೋವಿಂದ ಕಾರಜೋಳರನ್ನು ಗೆಲ್ಲಿಸಿ ಕೇಂದ್ರಕ್ಕೆ ಕಳಿಸಿದರೆ ಮಂತ್ರಿಗಳಾಗಿ ಜಿಲ್ಲೆಯನ್ನು ಅಭಿವೃದ್ಧಿಪಡಿಸುತ್ತಾರೆಂಬ ವಿಶ್ವಾಸವಿದೆ. ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ ಎಂದು ನುಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್, ಪುರುಷೋತ್ತಮ ಪತ್ರಿಕಾಗೋಷ್ಠಿಯಲ್ಲಿದ್ದರು.