ಭತ್ತ ಖರೀದಿ ಕೇಂದ್ರಗಳನ್ನು ತುರ್ತಾಗಿ ತೆರೆಯಿರಿ

| Published : Nov 20 2025, 02:00 AM IST

ಭತ್ತ ಖರೀದಿ ಕೇಂದ್ರಗಳನ್ನು ತುರ್ತಾಗಿ ತೆರೆಯಿರಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆ ಆಗಿರುವುದರಿಂದ ಜಿಲ್ಲೆಯಾದ್ಯಂತ ಹೆಚ್ಚಿನ ರೈತರು ಭತ್ತವನ್ನು ಬೆಳೆದಿದ್ದಾರೆ,

ಕನ್ನಡಪ್ರಭ ವಾರ್ತೆ ಟಿ. ನರಸೀಪುರಭತ್ತಕ್ಕೆ ಬೆಂಬಲ ಬೆಲೆಯೊಂದಿಗೆ ಹೆಚ್ಚುವರಿಯಾಗಿ 500 ರು. ಪ್ರೋತ್ಸಾಹ ಧನವನ್ನು ಘೋಷಣೆ ಮಾಡುವ ಮೂಲಕ ರಾಜ್ಯ ಸರ್ಕಾರ ತುರ್ತಾಗಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ.ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆ ಆಗಿರುವುದರಿಂದ ಜಿಲ್ಲೆಯಾದ್ಯಂತ ಹೆಚ್ಚಿನ ರೈತರು ಭತ್ತವನ್ನು ಬೆಳೆದಿದ್ದಾರೆ, ಕೇಂದ್ರ ಸರ್ಕಾರ ಕ್ವಿಂಟಾಲ್ ಭತ್ತಕ್ಕೆ ರು. 2362 ಬೆಂಬಲ ಬೆಲೆ ಘೋಷಿಸಿದೆ. ಆದರೆ ಈ ಬೆಲೆ ರೈತ ವ್ಯವಸಾಯ ಮಾಡಿದ ಖರ್ಚಿಗೂ ಕೂಡ ಸಾಲದು ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ, ಈಗಾಗಲೇ ಕೇರಳ, ಒಡಿಸ್ಸಾ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ನೀಡುತ್ತಿರುವಂತೆ ಕ್ವಿಂಟಾಲ್ ಭತ್ತಕ್ಕೆ ಪ್ರೋತ್ಸಾಹ ಧನವಾಗಿ 500 ರು. ಬೆಂಬಲ ಬೆಲೆ ಘೋಷಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.ರೈತರು ಬೆಳೆದ ಬೆಳೆಗಳನ್ನು ಬೆಂಬಲ ಬೆಲೆಗೆ ಮಾರಾಟ ಮಾಡಲು ಗ್ರಾಪಂ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು, ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರಗಳಿವೆಯಾದರೂ ಅವು ತೆರೆಯುವ ಮೊದಲೇ ರೈತರು ಸಾಲದ ಕಿರುಕುಳ ತಾಳಲಾರದೇ ಸ್ವಾಭಿಮಾನಕ್ಕೆ ಅಂಜಿ ಭತ್ತವನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಮತ್ತೆ ಸಾಲದ ಸುಳಿಗೆ ಸಿಲುಕುತ್ತಿದ್ದಾರೆ, ಆದ್ದರಿಂದ ಭತ್ತದ ಖಟಾವು ಆರಂಭವಾಗುವ 20 ದಿನಗಳ ಮೊದಲೇ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಅವರು ಮನವಿ ಮಾಡಿದರು.ರೈತರು ಸರ್ಕಾರ ಘೋಷಿಸಿರುವ ಕ್ವಿಂಟಾಲ್ ಭತ್ತವನ್ನು 2369 ರು. ಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಬಾರದು ಹಾಗೂ ಬಂಡವಾಳ ಶಾಹಿಗಳು, ದಲ್ಲಾಳಿಗಳು ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ರೈತರಿಂದ ಭತ್ತ ಖರೀದಿಸಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ,ತಾಲೂಕು ಉಪಾಧ್ಯಕ್ಷ ರಂಗರಾಜು, ಬನ್ನೂರು ಗ್ರಾಮಾಂತರ ಘಟಕದ ಮುಖಂಡರಾದ ಲಿಂಗಣ್ಣ, ಅರುಣ್, ಕುಮಾರ್ , ಮಧು, ಗಿರಿರಾಜ್, ಸ್ವಾಮಿ, ಕುಳ್ಳೆಗೌಡ, ಕುಮಾರ್, ಮಹೇಂದ್ರ, ಶ್ರೀನಿವಾಸ್ ಇದ್ದರು.