ಡಿಕೆಶಿಗೆ ಸುಪ್ರೀಂನಿಂದ ಮತ್ತೊಮ್ಮೆ ರಿಲೀಫ್‌

| Published : Mar 23 2024, 01:06 AM IST

ಸಾರಾಂಶ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೆ ರಿಲೀಫ್‌ ಸಿಕ್ಕಿದೆ. ಶಿವಕುಮಾರ್‌ ವಿರುದ್ಧದ ಇ.ಡಿ. ಕೇಸ್‌ ರದ್ದಾಗಲು ಕಾರಣವಾಗಿದ್ದ ಪವನ್‌ ದಿಬ್ಬೂರ್‌ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ತೀರ್ಪು ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇ.ಡಿ.) ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾ ಮಾಡಿದೆ.

ಕನ್ನಡಪ್ರಭ ವಾರ್ತೆ ನವದೆಹಲಿಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೆ ರಿಲೀಫ್‌ ಸಿಕ್ಕಿದೆ. ಶಿವಕುಮಾರ್‌ ವಿರುದ್ಧದ ಇ.ಡಿ. ಕೇಸ್‌ ರದ್ದಾಗಲು ಕಾರಣವಾಗಿದ್ದ ಪವನ್‌ ದಿಬ್ಬೂರ್‌ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ತೀರ್ಪು ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇ.ಡಿ.) ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾ ಮಾಡಿದೆ.ದಿಬ್ಬೂರು ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ರದ್ದು ಮಾಡಿತ್ತು. ಅಕ್ರಮ ಹಣವರ್ಗಾವಣೆ ತಡೆ(ಪಿಎಂಎಲ್‌) ಕಾಯ್ದೆ ಜತೆಗೆ 120-ಬಿ ಸೆಕ್ಷನ್‌ ಸೇರಿಸಿ ಇ.ಡಿ., ಶಿವಕುಮಾರ್‌ ವಿರುದ್ಧ ಪ್ರಕರಣ ದಾಖಲಿಸಿತ್ತು. ದಿಬ್ಬೂರು ಪ್ರಕರಣದಲ್ಲಿ ಪಿಎಂಎಲ್‌ ಕೇಸ್‌ನಲ್ಲಿ 120-ಬಿ ಸೆಕ್ಷನ್‌ ಸೇರಿಸಲು ಅವಕಾಶ ಇಲ್ಲ ಎಂದು ಹಿಂದೆ ಕೋರ್ಟ್‌ ತೀರ್ಪು ನೀಡಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಶಿವಕುಮಾರ್‌ ವಿರುದ್ಧದ ಕೇಸ್ ಕೂಡ ರದ್ದಾಗಿತ್ತು. ಇದೀಗ ದಿಬ್ಬೂರ್‌ ಕೇಸಿನ ತೀರ್ಪು ವಿರುದ್ಧ ಮರುಪರಿಶೀಲನಾ ಅರ್ಜಿ ವಜಾಗೊಂಡಿರುವುದರಿಂದ ಶಿವಕುಮಾರ್‌ಗೆ ಮತ್ತೊಮ್ಮೆ ರಿಲೀಫ್‌ ಸಿಕ್ಕಂತಾಗಿದೆ.ಡಿಕೆಶಿ ಸಿಬಿಐ ತನಿಖೆ ವಾಪಸ್‌:ಏ.5ರಿಂದ ಕೋರ್ಟ್‌ ವಿಚಾರಣೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ಕುರಿತ ಅಂತಿಮ ವಿಚಾರಣೆಯನ್ನು ಏ.5ರಿಂದ ನಡೆಸುವುದಾಗಿ ಹೈಕೋರ್ಟ್‌ ತಿಳಿಸಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ಅರ್ಜಿಯ ವಿಚಾರಣೆ ನಡೆಯಿತು.ಕೆಲ ಕಾಲ ಡಿ.ಕೆ. ಶಿವಕುಮಾರ್‌, ಸಿಬಿಐ ಮತ್ತು ಯತ್ನಾಳ್‌ ಪರ ವಕೀಲರ ವಾದಾಂಶ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಏ.5ಕ್ಕೆ ಮುಂದೂಡಿತು. ಅಂದಿನಿಂದ ಅರ್ಜಿ ಸಂಬಂಧ ಅಂತಿಮ ವಾದ-ಪ್ರತಿವಾದ ಆಲಿಸಲಾಗುವುದು ಎಂದು ಪೀಠ ತಿಳಿಸಿದೆ.

ಇದಕ್ಕೂ ಮುನ್ನ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಬೆಳವಣಿಗೆಗಳು ನಡೆದಿವೆ. ಆ ಕುರಿತು ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

ಪ್ರಕರಣದ ಹಿನ್ನೆಲೆ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ 2022ರ ಸೆ.25ರಂದು ಆದೇಶಿಸಿತ್ತು. ಈ ಆದೇಶ ರದ್ದತಿ ಕೋರಿ ಶಿವಕುಮಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು 2023ರ ಏ.20ರಂದು ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಈ ತೀರ್ಪು ಪ್ರಶ್ನಿಸಿ ಶಿವಕುಮಾರ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಏಕ ಸದಸ್ಯ ನ್ಯಾಯಪೀಠದ ಆದೇಶ ಮತ್ತು ಸಿಬಿಐ ತನಿಖೆಗೆ ವಿಭಾಗೀಯ ಪೀಠ ತಡೆ ನೀಡಿತ್ತು ಈ ಮಧ್ಯೆ ಹಾಲಿ ಕಾಂಗ್ರೆಸ್‌ ಸರ್ಕಾರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನ.28ರಂದು ಹಿಂಪಡೆದಿತ್ತು. ಜತೆಗೆ, ತನಿಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿತ್ತು. ಅದನ್ನು ಪ್ರಶ್ನಿಸಿ ಸಿಬಿಐ ಮತ್ತು ಯತ್ನಾಳ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.