ಸಾರಾಂಶ
ಸುರತ್ಕಲ್- ಬಿ.ಸಿ. ರೋಡ್ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ಏ.24 ರಂದು ಸಂಜೆ 3.30ಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಚಾಲನೆ ದೊರೆಯಲಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ನವ ಮಂಗಳೂರು ಬಂದರು ವ್ಯಾಪ್ತಿ (NMPRCL)ಗೆ ಸೇರಿದ ಸುರತ್ಕಲ್- ಬಿ.ಸಿ. ರೋಡ್ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ಏ.24 ರಂದು ಸಂಜೆ 3.30ಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಚಾಲನೆ ದೊರೆಯಲಿದೆ.ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಬಹುಬೇಡಿಕೆ ಹಾಗೂ ನಿರೀಕ್ಷೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ. ಈ ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಜತೆಗೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ. ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್ ಹಾಗೂ ನವ ಮಂಗಳೂರು ಬಂದರು ರಸ್ತೆ ಕಂಪೆನಿ ಲಿಮಿಟೆಡ್(ಎನ್ಎಂಪಿಆರ್ಸಿಎಲ್)ನ ಅಧಿಕಾರಿಗಳು ಭಾಗವಹಿಸಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಅದರಲ್ಲೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾದು ಹೋಗುವ ಸುರತ್ಕಲ್-ನಂತೂರು, ಬಿಸಿ.ರೋಡ್-ಪಡೀಲ್ ಹಾಗೂ ನಂತೂರು ಜಂಕ್ಷನ್ನಿಂದ ಪಡೀಲ್ ವರೆಗಿನ ಬೈಪಾಸ್ ರಸ್ತೆ ಸೇರಿದಂತೆ ಒಟ್ಟು 37.42 ಕಿಮೀ. ದೂರದ ಹೆದ್ದಾರಿಗಳ ರಿಪೇರಿ, ಮರುಡಾಂಬರೀಕರಣ ಹಾಗೂ ನಿರ್ವಹಣೆ ಕೆಲಸಗಳಿಗಾಗಿ ನವ ಮಂಗಳೂರು ಬಂದರು ರಸ್ತೆ ಕಂಪೆನಿ ಲಿಮಿಟೆಡ್(ಎನ್ಎಂಪಿಆರ್ಸಿಎಲ್) ಒಟ್ಟು 28.58 ಕೋಟಿ ರು. ವೆಚ್ಚದಲ್ಲಿ ಕಾಮಗಾರಿಗಳು ನಡೆಯಲಿವೆ. ಒಟ್ಟು 28.58 ಕೋಟಿ ರು. ವೆಚ್ಚದಲ್ಲಿ ಸುರತ್ಕಲ್ನಿಂದ ಎಪಿಎಂಸಿ, ಕೂಳೂರಿನಿಂದ ಎ.ಜೆ. ಆಸ್ಪತ್ರೆ ಹಾಗೂ ನಂತೂರಿನಿಂದ ಪಡೀಲ್ವರೆಗಿನ 11.084 ಕಿಮೀ. ಉದ್ದದ ರಸ್ತೆಯ ಡಾಂಬರೀಕರಣ ನಡೆಯಲಿದೆ.