ಸತೀಶ, ಡಿಕೆಶಿ ಜತೆಗೆ ಸುರ್ಜೇವಾಲಾ ಗೌಪ್ಯ ಸಭೆ

| Published : Jan 18 2025, 12:48 AM IST

ಸಾರಾಂಶ

ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಸಚಿವ ಸತೀಶ ಜಾರಕಿಹೊಳಿ ನಡುವಿನ ಬಣ ಬಡಿದಾಟಕ್ಕೆ ಬ್ರೇಕ್‌ ಹಾಕಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ ಸಿಂಗ್‌ ಸುರ್ಜೇವಾಲಾ ಅವರು ಬೆಳಗಾವಿಯಲ್ಲಿ ಶುಕ್ರವಾರ ಇಬ್ಬರೂ ಮುಖಂಡರ ಜೊತೆಗೆ ಪ್ರತ್ಯೇಕವಾಗಿ ಗೌಪ್ಯ ಸಭೆ ನಡೆಸಿದ್ದಾರೆ. ಹೀಗಾಗಿ ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಸಚಿವ ಸತೀಶ ಜಾರಕಿಹೊಳಿ ನಡುವಿನ ಬಣ ಬಡಿದಾಟಕ್ಕೆ ಬ್ರೇಕ್‌ ಹಾಕಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ ಸಿಂಗ್‌ ಸುರ್ಜೇವಾಲಾ ಅವರು ಬೆಳಗಾವಿಯಲ್ಲಿ ಶುಕ್ರವಾರ ಇಬ್ಬರೂ ಮುಖಂಡರ ಜೊತೆಗೆ ಪ್ರತ್ಯೇಕವಾಗಿ ಗೌಪ್ಯ ಸಭೆ ನಡೆಸಿದ್ದಾರೆ. ಹೀಗಾಗಿ ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಬೆಳಗಾವಿಯಲ್ಲಿ ಜ.21ರಂದು ನಡೆಯುವ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆ ಸುರ್ವೇವಾಲಾ ಅವರು ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರ ಜೊತೆಗೆ ಪೂರ್ವಭಾವಿ ಸಭೆ ನಡೆಸಿದರು.

ಮಾಧ್ಯಮ ಪ್ರತಿನಿಧಿಗಳನ್ನು ದೂರವಿಟ್ಟು ಸಭೆ ನಡೆಸಿದ ಸುರ್ಜೇವಾಲಾ, ಸಚಿವ ಸತೀಶ ಜಾರಕಿಹೊಳಿ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರನ್ನು ತಮ್ಮ ಅಕ್ಕ ಪಕ್ಕದಲ್ಲಿ ಕೂರಿಸಿಕೊಂಡಿದ್ದು ಅಚ್ಚರಿಗೆ ಕಾರಣವಾಯಿತು. ಸಭೆಯಲ್ಲಿ ಸಚಿವರಾದ ಆರ್.ಬಿ. ತಿಮ್ಮಾಪುರ, ಬೋಸರಾಜು, ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ, ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ, ಪ್ರಕಾಶ ಹುಕ್ಕೇರಿ ಸೇರಿದಂತೆ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ ನಾಯಕರು ಇದ್ದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದ ಸುರ್ಜೇವಾಲಾ ಅವರು, ಡಿ.ಕೆ.ಶಿವಕುಮಾರ್‌ ವಿರುದ್ಧ ಮುನಿಸಿಕೊಂಡಿರುವ ಸಚಿವ ಸತೀಶ ಜಾರಕಿಹೊಳಿ ಅವರ ಮನವೊಲಿಕೆಗೆ ಯತ್ನಿಸಿದರು ಎನ್ನಲಾಗಿದೆ. ಸಭೆ ಬಳಿಕ ಸತೀಶ ಜಾರಕಿಹೊಳಿ, ಸುರ್ವೇವಾಲಾ ಮತ್ತು ಡಿ.ಕೆ. ಸುರೇಶ್‌ ಅವರು ಒಂದೇ ವಾಹನದಲ್ಲಿ ತೆರಳಿದರು. ಬಳಿಕ ಅವರು ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿರುವ ಸಿಪಿಎಡ್‌ ಮೈದಾನದಲ್ಲಿ ಸಿದ್ಧತೆ ಪರಿಶೀಲಿಸಿದರು. ಕಾರ್ಯಕರ್ತರ ಸಭೆ ಬಳಿಕ ಸತೀಶ ಜಾರಕಿಹೊಳಿ ಅವರು ಕಾಗವಾಡಕ್ಕೆ ತೆರಳಿದರು. ನಗರದ ಖಾಸಗಿ ಹೊಟೇಲ್‌ನಲ್ಲಿ ಸುರ್ವೇವಾಲಾ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಜೊತೆಗೆ ಪ್ರತ್ಯೇಕವಾಗಿ ಅರ್ಧ ಗಂಟೆ ಸಭೆ ನಡೆಸಿದರು. ಈ ವೇಳೆ ಡಿ.ಕೆ.ಸುರೇಶ್‌ ಕೂಡ ಜತೆಗಿದ್ದರು. ಬಳಿಕ ಮೂವರು ಒಂದೇ ವಾಹನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ದಾಖಲಾಗಿರುವ ಆಸ್ಪತ್ರೆಗೆ ತೆರಳಿ, ಆರೋಗ್ಯ ವಿಚಾರಿಸಿದರು.