ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿಪಟ್ಟಣದ ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಶ್ರೀಆಂಜನೇಯಸ್ವಾಮಿ ದೇವಸ್ಥಾನದ ಜಾಗ ಎನ್ನಲಾದ ಸ್ಥಳದಲ್ಲಿ ನಡೆಯುತ್ತಿದ್ದ ಕಾಮಗಾರಿಗೆ ತಹಸೀಲ್ದಾರ್ ಕೆ.ಎನ್.ಲೋಕೇಶ್ ನೇತೃತ್ವದಲ್ಲಿ ಅಧಿಕಾರಿಗಳು ತಡೆ ನೀಡಿದರು.
ದೇವಸ್ಥಾನಕ್ಕೆ ಸೇರಿದೆ ಎನ್ನಲಾದ ಜಾಗದಲ್ಲಿ ಕಳೆದ ಕೆಲ ತಿಂಗಳ ಹಿಂದೆ ರಾಮಾಂಜನೇಯ ಸೇವಾ ಸಮಿತಿ ಟ್ರಸ್ಟ್ ಹೆಸರಿನಲ್ಲಿ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಸಮಿತಿ ಸದಸ್ಯರು ಮುಂದಾಗಿದ್ದರು.ಆದರೆ, ಈ ಜಾಗವು ಸರ್ಕಾರಕ್ಕೆ ಸೇರಿದ್ದು ಎಂದು ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳು ಮಳಿಗೆಗಳ ನಿರ್ಮಾಣ ಕಾಮಗಾರಿಗೆ ತಡೆ ನೀಡಿ ಈ ಜಾಗ ಸರ್ಕಾರದ ಆಸ್ತಿ ಎಂದು ನಾಮಫಲಕ ಅಳವಡಿಸಿದ್ದರು.
ಈ ವೇಳೆ ಪುರಸಭೆ ಎದುರು ಸಮಿತಿ ಸದಸ್ಯರು ಜಾಗ ಮುಜರಾಯಿ ಇಲಾಖೆಗೆ ಸೇರಿಲ್ಲ ಟ್ರಸ್ಟ್ ಹೆಸರಿನಲ್ಲಿ ಇ-ಸ್ವತ್ತು ಆಗಿದೆ. ಕಾಮಗಾರಿ ಮುಂದುವರೆಸಲು ಅನುಮತಿ ನೀಡಲು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಈ ನಡುವೆ ಪ್ರಕರಣ ನ್ಯಾಯಾಲಯದ ಮೇಟ್ಟಿಲೇರಿ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಆದೇಶ ಹೊರಡಿಸಿತ್ತು.ಆದರೆ, ಏಕಾಏಕಿ ಸಮಿತಿ ಸದಸ್ಯರು ಕಾಮಗಾರಿಯ ಮುಂದುವರೆಸುತ್ತಿದ್ದರು ಎನ್ನಲಾಗಿದೆ. ಕೂಡಲೇ ಸ್ಥಳಕ್ಕೆ ಬಂದ ತಹಸೀಲ್ದಾರ್ ಹಾಗೂ ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ನೇತೃತ್ವದಲ್ಲಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಿದರು. ಇದ್ದರಿಂದ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ವಾಗ್ದಾದ ನಡೆಯಿತು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋದರು. ಇದೇ ವೇಳೆ ಕಾಮಗಾರಿ ಸ್ಥಳದಲ್ಲಿ ಹನುಮ ಜಯಂತಿ ಆಚರಣೆಗೆ ಸಿದ್ಧತೆ ನಡೆಸುತ್ತಿದ್ದ ಕಂಡು ಅಧಿಕಾರಿಗಳು ತಡೆ ನೀಡಿದರು.
ತಹಸೀಲ್ದಾರ್ ಕೆ.ಎನ್.ಲೋಕೇಶ್ ಮಾತನಾಡಿ, ಈ ಜಾಗವು ಸರ್ಕಾರಕ್ಕೆ ಸೇರಿದ್ದಾಗಿದೆ. ಅಲ್ಲದೇ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಆದೇಶ ನೀಡಿದೆ. ಆದೇಶ ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದರು.