ಸಾರಾಂಶ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ಅನುಗ್ರಹ ಪಿಯು ಮತ್ತು ಪದವಿ ಕಾಲೇಜು ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ಅನುಗ್ರಹ ಪಿಯು ಮತ್ತು ಪದವಿ ಕಾಲೇಜು ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಲಿಂಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ, ಸದಸ್ಯರಾದ ಎಂ ಎನ್ ಚಂದ್ರಮೋಹನ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ತಮ್ಮ ದೇಹದ ಆರೋಗ್ಯದೊಂದಿಗೆ ಉತ್ತಮ ಸಮಾಜದ ಆರೋಗ್ಯ ಕಾಪಾಡುವಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.ಸಂಪನ್ಮೂಲ ವ್ಯಕ್ತಿಯಾಗಿ ಪೊಲೀಸ್ ಇಲಾಖೆ ಹೆಡ್ ಕಾನ್ಸ್ಟೇಬಲ್ ಆಶಾ ಅವರು ಪಾಲ್ಗೊಂಡು, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವ ಪೀಳಿಗೆಯ ಪಾತ್ರ ಪ್ರಮುಖದ್ದಾಗಿದೆ.
ವಿದ್ಯಾರ್ಥಿಗಳು ಸಮಾಜದ ಮುಖ್ಯವಾಹಿನಿಗೆ ಸೇರುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.ನಿಯಮ ಬಾಹಿರ ಅಥವಾ ಕಾನೂನುಬಾಹಿರವಾಗಿ ಯಾವುದೇ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಾರದು. ಗುರು ಹಿರಿಯರಿಗೆ ಗೌರವ ನೀಡಬೇಕು. ಮಾದಕ ವಸ್ತುಗಳ ದಾಸರಾಗಬಾರದು.
ವಾಹನಗಳಲ್ಲಿ ತೆರಳುವ ಸಂದರ್ಭ ಕಟ್ಟುನಿಟ್ಟಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದಲ್ಲಿ ಅನಾಹುತಗಳು ಉಂಟಾಗುತ್ತವೆ ಮತ್ತು ಕಾನೂನು ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದರು. ವಿದ್ಯಾರ್ಥಿಗಳೊಂದಿಗೆ ಸ್ವಾಸ್ಥ್ಯ ಸಂಕಲ್ಪದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.ಒಕ್ಕೂಟದ ಅಧ್ಯಕ್ಷೆ ಲಲಿತಾ, ಜಯಲಕ್ಷ್ಮಿ, ಕುಶಾಲನಗರ ವಲಯ ಮೇಲ್ವಿಚಾರಕರಾದ ಪೂರ್ಣಿಮಾ ಇದ್ದರು.