ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಮಾಡಿಸುವ ನಿಟ್ಟಿನಲ್ಲಿ ಸ್ವೀಪ್ ಚಟುವಟಿಕೆ ವ್ಯಾಪಕವಾಗಿ ಕೈಗೊಂಡು ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಿ, ವೋಟರ್ ಹೆಲ್ಪಲೈನ್ ಬಗ್ಗೆ ಜಾಗೃತಿ ಮೂಡಿಸಿ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಎಂ.ಕೂರ್ಮಾರಾವ್ ಅಧಿಕಾರಿಗಳಿಗೆ ನಿರ್ದೇಶಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸ್ವೀಪ್ ಚಟುವಟಿಕೆ ಸಕ್ರಿಯವಾಗಿ ಕೈಗೊಳ್ಳುವ ಮೂಲಕ ಮತದಾರರ ನೋಂದಣಿಗೆ ಹೆಚ್ಚಿನ ಗಮನ ಹರಿಸಬೇಕು. ಮತದಾನದ ಮಹತ್ವ ತಿಳಿಸುವ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕು. ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್, ಪ್ರಾತ್ಯಕ್ಷಿಕೆ ಹಾಗೂ ಜಾಗೃತಿ ಕಾರ್ಯಕ್ರಮ ಗ್ರಾಮ ಮಟ್ಟದಲ್ಲಿಯೂ ಏರ್ಪಡಿಸಿ ಹೆಚ್ಚಿನ ಅರಿವು ಮೂಡಿಸಿ, ಯುವ ಮತದಾರರ ಹೆಸರು ಸೇರ್ಪಡೆ ಮಾಡಬೇಕು. ಅಂಗವಿಕಲರು, ಲೈಂಗಿಕ ಅಲ್ಪಸಂಖ್ಯಾತರು ಕೂಡ ಪೂರ್ಣ ಪ್ರಮಾಣದಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ಮಾಡಬೇಕು ಎಂದರು.
ಕಳೆದ ಬಾರಿ ಮತದಾನ ಪ್ರಮಾಣ ಕಡಿಮೆ ಆಗಿರುವ ಮತಗಟ್ಟೆ ಗುರುತಿಸಿ ಅಂತಹ ಮತಗಟ್ಟೆವಾರು ನೋಡಲ್ ಅಧಿಕಾರಿ ನೇಮಿಸಿ ಮತದಾನ ಪ್ರಮಾಣ ಹೆಚ್ಚಿಸಲು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲು ಸೂಚಿಸಿ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಇವಿಎಂ ಟ್ರೈನಿಂಗ್ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಪರಿಣಾಮಕಾರಿ ಮಾಡಲು ಸೂಚಿಸಿದರು.ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರೀಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಜಿಲ್ಲಾ ಪಂಚಾಯತ್ ಸಿಪಿಓ ಗುರುನಾಥ ಗೌಡಪ್ಪನ್ನೋರ್, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಚುನಾವಣೆ ತಹಸೀಲ್ದಾರ್ ಸಂತೋಷರಾಣಿ ಸೇರಿ ಎಲ್ಲಾ ತಾಲೂಕಿನ ತಹಸೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.